ADVERTISEMENT

ಬಡವರಿಗಾಗಿ ಒಂದು ಲಕ್ಷ ಮನೆ ನಿರ್ಮಾಣ: ವಸತಿ ಸಚಿವ ವಿ. ಸೋಮಣ್ಣ ಭರವಸೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 19:41 IST
Last Updated 24 ಫೆಬ್ರುವರಿ 2020, 19:41 IST
ಕಾಮಗಾರಿಗೆ ವಸತಿ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಮರಿಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ ಇದ್ದರು
ಕಾಮಗಾರಿಗೆ ವಸತಿ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಮರಿಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ ಇದ್ದರು   

ಹೆಸರಘಟ್ಟ: ‘ಬಡವರಿಗೆ, ಕಾರ್ಮಿಕರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ನಗರದಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ಆಟೊ ಚಾಲಕರು, ಕಟ್ಟಡ ಕಾರ್ಮಿಕರಿಗೆ ಆದ್ಯತೆ ಮೇಲೆ ನೀಡಲಾಗುವುದು’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ದಾಸನಪುರ ಹೋಬಳಿ ಅಗ್ರಹಾರ ಪಾಳ್ಯದಲ್ಲಿ ರಾಜೀವ ಗಾಂಧಿ ವಸತಿ ನಿಗಮದ ವತಿಯಿಂದ ಬೆಂಗಳೂರು ವಸತಿ ಯೋಜನೆಯಡಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ 836 ಮನೆಗಳ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್‌ ಸರ್ಕಾರವಿದ್ದಾಗ ಕೇಂದ್ರ ಸರ್ಕಾರವು ₹600 ಕೋಟಿ ಅನುದಾನವನ್ನು ನೀಡಿತ್ತು. ಆದರೆ, ಟೆಂಡರ್ ಕರೆದು ಅಂದಿನ ಸರ್ಕಾರ ಕೆಲಸ ಮಾಡದೇ ಸುಮ್ಮನಾಯಿತು. ನಾಲ್ಕು ವರ್ಷಗಳ ಕಾಲ ನನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ನಮ್ಮ ಸರ್ಕಾರ ಚಾಲನೆ ನೀಡುತ್ತಿದೆ’ ಎಂದರು.

ADVERTISEMENT

‘ಮೊದಲ ಹಂತವಾಗಿ 836 ಬಹುಮಹಡಿ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಈ ವರ್ಷ 50 ಸಾವಿರ ಮನೆ ನಿರ್ಮಿಸಿ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು. ಯಲಹಂಕ ಕ್ಷೇತ್ರದಲ್ಲಿ ಮೂರು ಸಾವಿರ ಮನೆಗಳನ್ನು ನಿರ್ಮಿಸಲಾಗುವುದು’ ಎಂದು ಅವರು ಭರವಸೆ ನೀಡಿದರು.

‘ಸರ್ಕಾರದಿಂದ ನಿರ್ಮಿಸುತ್ತಿರುವ ವಸತಿ ಸಮುಚ್ಚಯದಲ್ಲಿ ಆಸ್ಪತ್ರೆ, ಆಟದ ಮೈದಾನ, ಅಂಗನವಾಡಿ, ಸರ್ಕಾರಿ ಶಾಲೆ, ಕೊಳಚೆ ನೀರು ಸಂಸ್ಕರಣಾ ಘಟಕಗಳನ್ನು ನಿರ್ಮಿಸಲಾಗುವುದು’ ಎಂದು ಅವರು ತಿಳಿಸಿದರು.

‘ಮಹದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿ ಭಾಗದಲ್ಲಿ ಮನೆಗಳ ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದರು.

ಶಾಸಕ ಎಸ್.ಆರ್. ವಿಶ್ವನಾಥ್, ಕುಕ್ಕನಹಳ್ಳಿ, ಗೋಪಾಲಪುರ, ಬಿಳಿಜಾಜಿ, ಆಲೂರು, ಪಿಳ್ಳಹಳ್ಳಿ, ಲಕ್ಷ್ಮಿಪುರ ಗ್ರಾಮಗಳಲ್ಲಿ ಸರ್ಕಾರಿ ಜಮೀನು ಇದೆ. ಯಲಹಂಕದಲ್ಲಿ ಹತ್ತು ಸಾವಿರ ಮನೆಗಳನ್ನು ನಿರ್ಮಿಸುವ ಗುರಿ ಇದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ ಫಲಾನುಭವಿಗಳ ಪಟ್ಟಿ ತಯಾರಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.