ADVERTISEMENT

ಅಕ್ರಮ ಕಟ್ಟಡ ನೆಲಸಮ ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 19:56 IST
Last Updated 18 ಡಿಸೆಂಬರ್ 2019, 19:56 IST

ಬೆಂಗಳೂರು: ‘ಅಕ್ರಮ ಕಟ್ಟಡಗಳ ನೆಲಸಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಹಾಗೂ ಸಿವಿಲ್‌ ಕೋರ್ಟ್‌ಗಳು ನೀಡಿರುವ ತಡೆ ಆದೇಶಗಳನ್ನು ತೆರವುಗೊಳಿಸುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರ ಅಧೀನ ನ್ಯಾಯಾಲಯಗಳಲ್ಲಿ ಹಾಜರಾಗುವ ವಕೀಲರು ಈಗಾಗಲೇ ಮನವಿ ಸಲ್ಲಿಸಿದ್ದಾರೆ’ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ಕೆ.ಎನ್‌.ಪುಟ್ಟೇಗೌಡ ಅವರು, ‘ಹೊಸ ಪ್ರಕರಣಗಳಲ್ಲಿ ಯಾವುದೇ ಅರ್ಜಿದಾರರು ತಡೆ ಆದೇಶ ಪಡೆಯದಂತೆ ಕಾನೂನು ರೀತ್ಯಾ ಅಧೀನ ನ್ಯಾಯಾಲಯಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಅಕ್ರಮ ಕಟ್ಟಡಗಳ ಬಗ್ಗೆ ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಬಂದಿರುವ ದೂರುಗಳ ಪರಿಶೀಲನೆ ನಡೆಯುತ್ತಿದೆ. ಈ ಕುರಿತ ವಿವರಗಳನ್ನು ಸಲ್ಲಿಸಲು ಕಾಲಾವಕಾಶ ಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.

ಕೋರಿಕೆ ಏನು?: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಅಕ್ರಮ ಕಟ್ಟಡಗಳು, ಮಂಜೂರಾತಿ ಪಡೆದ ನಂತರದ ನಕ್ಷೆ ಮತ್ತು ನಿಯಮಗಳನ್ನು ಉಲ್ಲಂಘಿಸಿದ ಕಟ್ಟಡಗಳನ್ನು ನೆಲಸಮಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂಬುದು ಅರ್ಜಿಯಲ್ಲಿನ ಕೋರಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.