ಬೆಂಗಳೂರು: ‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವವರು ಬೆಂಗಳೂರು, ದೆಹಲಿಯಂತಹ ಮಹಾನಗರಗಳಿಗೆ ತೆರಳಿ, ಲಕ್ಷಾಂತರ ರೂಪಾಯಿ ವ್ಯಯಿಸಿ ತರಬೇತಿ ಪಡೆಯುತ್ತಾರೆ. ಆದರೆ, ‘ಪ್ರಜಾವಾಣಿ‘ಯಲ್ಲಿ ಪ್ರತಿ ಗುರುವಾರ ಪ್ರಕಟವಾಗುತ್ತಿರುವ ಸ್ಪರ್ಧಾವಾಣಿ ಓದಿದರೆ, ಸಾಕಷ್ಟು ಜ್ಞಾನಾರ್ಜನೆಯಾಗುವುದಲ್ಲದೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನೂ ಸಾಧಿಸಬಹುದು’ ಎಂದು ಕುಂಬಳಗೋಡಿನ ವಿವೇಕಾನಂದ ತಾಂತ್ರಿಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಇಂದಿರಾ ಗೋಪಾಲಕೃಷ್ಣ ಹೇಳಿದರು.
ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಹೆಚ್ಚಿನ ವಿದ್ಯಾರ್ಥಿಗಳು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಯನ್ನೇ ಓದುತ್ತಾರೆ. ಈ ಎರಡೂ ಪತ್ರಿಕೆಗಳಲ್ಲಿನ ಸುದ್ದಿಗಳು ನೈಜತೆಯಿಂದ ಕೂಡಿದ್ದು, ಯಾವುದೇ ಉತ್ಪ್ರೇಕ್ಷೆ ಇರುವುದಿಲ್ಲ. ಜೊತೆಗೆ ‘ಸ್ಪರ್ಧಾವಾಣಿ’ ಯಲ್ಲಿನ ಲೇಖನಗಳು ಕೇಂದ್ರ ಮತ್ತು ರಾಜ್ಯಲೋಕಸೇವಾ ಆಯೋಗಗಳು ನಡೆಸುವ ಪರೀಕ್ಷೆಗಳು ಸೇರಿದಂತೆ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವವರಿಗೆ ಉತ್ತಮ ಮಾರ್ಗದರ್ಶನ ಕೈಪಿಡಿಗಳಾಗಿವೆ’ ಎಂದರು.
ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ್, ‘ಗ್ರಾಮೀಣ ಭಾಗದ ಮಕ್ಕಳು ಯಾವುದೇ ಅವಕಾಶ ವಂಚಿತರಾಗಬಾರದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ ಪಡೆಯಬೇಕು’ ಎಂದರು.
ಸಂಸ್ಥೆಯ ಉಪನ್ಯಾಸಕರಿಗೆ ಮಾಹಿತಿ, ಮಾರ್ಗದರ್ಶನ ನೀಡಲಾಯಿತು. ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪ್ರಸರಣ ವಿಭಾಗದ ಉಪಪ್ರಧಾನ ವ್ಯವಸ್ಥಾಪಕ ಜಗನ್ನಾಥ ಜೋಯಿಸ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.