ಬೆಂಗಳೂರು: ‘ಡ್ರಗ್ಸ್ ಜಾಲ ಪ್ರಕರಣದ ತನಿಖೆ ಚುರುಕಾಗಿ ನಡೆಯುತ್ತಿದ್ದು, ಶೀಘ್ರವೇ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗುವುದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಕೋರಮಂಗಲದಕರ್ನಾಟಕ ರಾಜ್ಯ ಮೀಸಲು ಪೊಲೀಸ್(ಕೆಎಸ್ಆರ್ಪಿ) ಕವಾಯತು ಮೈದಾನದಲ್ಲಿ ಬುಧವಾರ ನಡೆದ ಕೆಎಸ್ಆರ್ಪಿ ಸಂಸ್ಥಾಪನಾ ದಿನ ಹಾಗೂ ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಪ್ರಕರಣದ ತನಿಖಾ ವೇಗ ಕುಂಠಿತ ಗೊಂಡಿಲ್ಲ. ಇಲಾಖೆಯ ಅಧಿಕಾರಿಗಳು ತನಿಖೆಯಲ್ಲಿ ಕಾರ್ಯಪ್ರವೃತ್ತರಾಗಿ
ದ್ದಾರೆ. ಪ್ರಕರಣ ಸಂಬಂಧ ಸಾಕ್ಷ್ಯಾಧಾರ
ಗಳನ್ನು ಕಲೆಹಾಕುವಲ್ಲಿ ನಿರತರಾಗಿದ್ದಾರೆ. ಆರೋಪಿಗಳ ವಿರುದ್ಧ ನಿಗದಿತ ಅವಧಿ ಯೊಳಗೆ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸುವ ಮೂಲಕ ನಮ್ಮ ತನಿಖಾ ವೇಗ ತೋರಿಸುತ್ತೇವೆ’ ಎಂದರು.
‘ಬೆಂಗಳೂರಿನಲ್ಲಿ ಇತ್ತೀಚೆಗೆ ಮೂವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ರಾಜ್ಯ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಒಂದೇ ರೀತಿ ತನಿಖೆ ನಡೆಸುತ್ತಿದ್ದಾರೆ. ಎನ್ಐಎಗೆ ಪೊಲೀಸರೂ ತನಿಖೆಗೆ ಸಹಕಾರ ನೀಡುತ್ತಿದ್ದಾರೆ’ ಎಂದರು.
ನೂತನ ಕಾನ್ಸ್ಟೆಬಲ್ಗಳಿಗೆ ಅಭಿನಂದನೆ: ‘ಕೋವಿಡ್ ಬಳಿಕ ಇದು ರಾಜ್ಯದಲ್ಲಿ ನಡೆದ ಮೊದಲ ಪಥಸಂಚಲನ. ಸಾಮಾನ್ಯ ದಿನಗಳಲ್ಲಿ ತರಬೇತಿ ನೀಡುವುದು ಕಷ್ಟ. ಕೊರೊನಾ ಕಾಲಘಟ್ಟದಲ್ಲೂ ಸುರಕ್ಷತಾ ಕ್ರಮಗಳನ್ನು ಪಾಲಿಸಿಕೊಂಡು ಅಧಿಕಾರಿಗಳು ತರ ಬೇತಿ ನೀಡಿದ್ದಾರೆ. 276 ಪೊಲೀಸ್ ಕಾನ್ಸ್ಟೆಬಲ್ಗಳು ತರಬೇತಿ ಮುಗಿಸಿ, ಇಲಾಖೆಗೆ ಸೇರ್ಪಡೆಯಾಗಿದ್ದಾರೆ. ಎಲ್ಲರೂ ಉತ್ತಮವಾಗಿ ಕಾರ್ಯ ನಿರ್ವಹಿಸಿ’ ಎಂದು ಪ್ರವೀಣ್ ಸೂದ್ ಅಭಿನಂದನೆ ತಿಳಿಸಿದರು.
ಇದೇ ವೇಳೆ ಪ್ಲಾಸ್ಮಾದಾನ, ರಕ್ತದಾನ ಶಿಬಿರ ಹಾಗೂ ಗಿಡ ನೆಡುವ ಕಾರ್ಯಕ್ರಮಗಳು ನಡೆದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.