ADVERTISEMENT

ಬಜೆಟ್‌ ಪೂರ್ವ ಸಭೆಗೆ ಬಿಎಸ್‌ವೈ ಚಾಲನೆ

ನಂದಿ ಬೆಟ್ಟ ಸಮೀಪದ ರೆಸಾರ್ಟ್‌ನಲ್ಲಿ ಸಭೆ: ‘ಸ್ಮಾರ್ಟ್‌ಸಿಟಿ’ಗೆ ವೇಗ ನೀಡಲು ಸಿ.ಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 20:29 IST
Last Updated 1 ಜನವರಿ 2021, 20:29 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಂಗಳೂರು: ಹೊಸ ವರ್ಷದ ಮೊದಲ ದಿನವಾದ ಶುಕ್ರವಾರ ಹಿರಿಯ ಅಧಿಕಾರಿಗಳಿಗೆ ನಗರದ ಹೊರ ವಲಯದ ನಂದಿ ಬೆಟ್ಟದ ಸಮೀಪದ ರೆಸಾರ್ಟ್‌ವೊಂದರಲ್ಲಿ ಭೋಜನ ಕೂಟ ಏರ್ಪಡಿಸುವ ಜತೆಗೆ, ಬಜೆಟ್‌ ಪೂರ್ವ ಸಭೆಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಮೊದಲ ದಿನ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಬಿಡಿಎ ವ್ಯಾಪ್ತಿಯಲ್ಲಿರುವ ಉದ್ಯಾನಗಳ ನಿರ್ವಹಣೆಯನ್ನು ಬಿಬಿಎಂಪಿಗೆ ನೀಡುವುದೂ ಸೇರಿ ಹಲವು ವಿಷಯಗಳ ಬಗ್ಗೆ ಯಡಿಯೂರಪ್ಪ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಬೆಂಗಳೂರು ನಗರಕ್ಕೆ ಮುಂಬರುವ ದಿನಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರು ಮಾಹಿತಿ ಪಡೆದರು.

ADVERTISEMENT

‘ಸ್ಮಾರ್ಟ್‌ಸಿಟಿ’ಗೆ ವೇಗ ನೀಡಲು ತಾಕೀತು: ರಾಜ್ಯದ ವಿವಿಧೆಡೆಗಳಲ್ಲಿ ಚಾಲನೆ ನೀಡಿರುವ ಸ್ಮಾರ್ಟ್ ಸಿಟಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯುತ್ ಸರಬರಾಜು ಕಂಪನಿಗಳು, ನಗರ ಸಭೆ ಹಾಗೂ ಪಾಲಿಕೆಗಳು, ಸಂಚಾರಿ ಪೊಲೀಸರು ಸಮನ್ವಯ ಸಾಧಿಸಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಸಾಕಾರಗೊಳಿಸಲು ತುರ್ತು ಕ್ರಮವಹಿಸಬೇಕು ಎಂದು ಹೇಳಿದರು.ಮುಂದಿನ ಆಯವ್ಯಯದಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಒತ್ತು ನೀಡಲು ಯೋಜಿಸಿರುವ ಮುಖ್ಯಮಂತ್ರಿ, ಇಲಾಖಾವಾರು ರೂಪಿಸಬಹುದಾದ ಜನಪರ ಯೋಜನೆಗಳ ನೀಲನಕ್ಷೆ ಯನ್ನು ಸಿದ್ಧಪಡಿಸಿಸಲ್ಲಿಸುವಂತೆ ಸೂಚನೆ ನೀಡಿದರು.

2022 ರ ಒಳಗೆ ರಾಜ್ಯದ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯ ನಕ್ಷೆಯಲ್ಲಿ ಹಾಗೂ ಸಮೃದ್ಧಿಯ ಕಕ್ಷೆಯಲ್ಲಿ ಕೊಂಡೊಯ್ಯಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರಕ್ಕೆ ಬೆನ್ನೆಲುಬಾಗಿ ಹಾಗೂ ಬೆಂಬಲವಾಗಿ ಟೊಂಕ ಕಟ್ಟಿ ನಿಲ್ಲುವುದಾಗಿ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮುಖ್ಯಮಂತ್ರಿಯವರಿಗೆ ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಹೊಸ ವರ್ಷಕ್ಕೆ ಭೋಜನ ಕೂಟ: ನಿನ್ನೆಯಷ್ಟೇ ನಿವೃತ್ತಿ ಹೊಂದಿದ ಟಿ.ಎಂ.ವಿಜಯಭಾಸ್ಕರ್‌ ಮತ್ತು ಹೊಸ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಹೊಸ ವರ್ಷದ ನಿಮಿತ್ತ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೋಜನ ಕೂಟ ಏರ್ಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.