ADVERTISEMENT

ಬೆಂಗಳೂರು ನಗರದಲ್ಲಿ ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ

ಮುದ್ರಾಧಾರಿಗಳು ಹೊರಗಡೆ ಓಡಾಡಿದರೆ ವಶಕ್ಕೆ: ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 21:51 IST
Last Updated 23 ಮಾರ್ಚ್ 2020, 21:51 IST
ಭಾಸ್ಕರ್ ರಾವ್
ಭಾಸ್ಕರ್ ರಾವ್   

ಬೆಂಗಳೂರು: ಕೊರೊನಾ ವೈರಾಣು ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರದ ನಿರ್ದೇಶನದಂತೆ ಮಾರ್ಚ್ 23ರ ಮಧ್ಯರಾತ್ರಿ 12 ಗಂಟೆಯಿಂದ ಮಾರ್ಚ್ 31ರ ಮಧ್ಯರಾತ್ರಿವರೆಗೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಒಂದೇ ಕಡೆ ಗುಂಪು ಸೇರಬಾರದು. ಅಕಸ್ಮಾತ್ ಸೇರಿದರೆ ಕಠಿಣ ಕ್ರಮವನ್ನೇ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಕೊರೊನಾ‌ ವೈರಾಣು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಲಾಕ್ ಡೌನ್ ಆದೇಶವನ್ನೂ ಹೊರಡಿಸಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಅವರು ಕೋರಿದರು.

ADVERTISEMENT

‘ಜನರೆಲ್ಲ ಆದಷ್ಟು ಮನೆಯಲ್ಲೇ ಉಳಿದುಕೊಳ್ಳಬೇಕು. ರಸ್ತೆ ಖಾಲಿ ಇದೆ ಎಂದು ಯಾರಾದರೂ ಕ್ರಿಕೆಟ್ ಆಡುವುದು ಹಾಗೂ ಸೆಲ್ಫಿ ತೆಗೆದುಕೊಳ್ಳುವುದನ್ನು ಮಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದರು.

ಹೊರಗಡೆ ಓಡಾಡಿದರೆ ವಶಕ್ಕೆ: ‘ವಿದೇಶದಿಂದ ಬಂದವರ ಕೈಗೆ ಈಗಾಗಲೇ ಮುದ್ರೆಗಳನ್ನು ಹಾಕಲಾಗಿದೆ. ಅವರೆಲ್ಲರೂ ಮನೆಯಲ್ಲೇ ಇರಬೇಕು. ಆಕಸ್ಮಾತ್ ಹೊರಗಡೆ ಬಂದರೆ ವಶಕ್ಕೆ ಪಡೆಯಲಾಗುವುದು’ ಎಂದು ಕಮಿಷನರ್ ಎಚ್ಚರಿಸಿದರು.

‘ವಿದ್ಯಾವಂತರೇ ಅನಾಗರಿಕರಾಗಿ ವರ್ತಿಸುತ್ತಿದ್ದಾರೆ. ಕೈ ಮೇಲೆ ಮುದ್ರೆ ಇದ್ದರೂ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. ಬೇರೆಯವರಿಗೂ ತೊಂದರೆ ಕೊಡುತ್ತಿದ್ದಾರೆ. ಇವರ ಮೇಲೆ ಕಣ್ಣಿಟ್ಟಿದ್ದೇವೆ. ಹುಷಾರ್’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.