ADVERTISEMENT

ಹಿಂದಿ ದಿವಸ ವಿರೋಧಿಸಿ ಪ್ರತಿಭಟನೆ

ಸಿಟಿ ಸಿವಿಲ್ ಕೋರ್ಟ್‌ ಆವರಣದಲ್ಲಿ ಕರಪತ್ರ ಹಂಚಿದ ‘ಕನ್ನಡ ಮೊದಲು ಅಭಿಯಾನ’ದ ಸದಸ್ಯರು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 19:46 IST
Last Updated 14 ಸೆಪ್ಟೆಂಬರ್ 2022, 19:46 IST
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು ಪ್ರತಿಭಟನೆ ನಡೆಸಿದರು
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು ಪ್ರತಿಭಟನೆ ನಡೆಸಿದರು   

ಬೆಂಗಳೂರು: ಹಿಂದಿ ದಿವಸ ಆಚರಣೆ ವಿರೋಧಿಸಿ ರಾಜ್ಯದ ವಿವಿಧೆಡೆ ಮಂಗಳವಾರ ಪ್ರತಿಭಟನೆಗಳು ನಡೆದವು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು ಫಲಕಗಳನ್ನು ಹಿಡಿದು ಹಿಂದಿ ದಿವಸ್ ವಿರುದ್ಧ ಘೋಷಣೆ ಕೂಗಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಧರಣಿ ನಡೆಸಿದರು.

‘ಪ್ರತಿವರ್ಷ ಸೆಪ್ಟೆಂಬರ್ 14ರಂದು ಕೇಂದ್ರ ಸರ್ಕಾರ ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ ಆಚರಣೆ ಮಾಡುತ್ತಿದೆ. ಹಿಂದಿ ಭಾಷೆಗೆ ಮಾತ್ರ ಬೇರೆ ಭಾಷೆಗಳಿಗಿಂತ ಮೇಲಿನ ಸ್ಥಾನ ನೀಡಿರುವುದು ತಾರತಮ್ಯ ನೀತಿ. ಸಾಂವಿಧಾನಿಕ ಸಂಸ್ಥೆಗಳ ಮೂಲಕವೇ ಎಲ್ಲಾ ಹಿಂದಿಯೇತರರ ಮೇಲೆ ಹಿಂದಿ ಹೇರಿಕೆ ಮಾಡುತ್ತಿದ್ದು, ಇದು ತಕ್ಷಣದಿಂದಲೇ ನಿಲ್ಲಬೇಕು’ ಎಂದು ನಾರಾಯಣಗೌಡ ಒತ್ತಾಯಿಸಿದರು.

ADVERTISEMENT

‘ಈ ಅಸಮಾನತೆ ತೊಡೆದು ಹಾಕಬೇಕು, ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲ ಇಪ್ಪತ್ತೆರಡು ಭಾಷೆಗಳನ್ನು ಕೇಂದ್ರ ಸರ್ಕಾರದ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿ ಮತ್ತು ಇಂಗ್ಲಿಷ್‌ಗೆ ನೀಡಲಾಗಿರುವ ಮಾನ್ಯತೆ ಮತ್ತು ಅವಕಾಶಗಳನ್ನು ಇತರ ಎಲ್ಲ ಭಾಷೆಗಳಿಗೂ ನೀಡಬೇಕು’ ಎಂದು ಆಗ್ರಹಿಸಿದರು.

ಮಲ್ಲೇಶ್ವರದ ಕುವೆಂಪು ಪ್ರತಿಮೆ ಬಳಿ ಕರ್ನಾಟಕ ರಕ್ಷಣಾ ವೇದಿಕೆ(ಎಚ್.ಶಿವರಾಮೇಗೌಡ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಚ್.ಶಿವರಾಮೇಗೌಡ ಮತ್ತು ಸಾ.ರಾ.ಗೋವಿಂದು ಅವರು ಹಿಂದಿ ವರ್ಣಮಾಲೆ ಚಿತ್ರಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಸಿಟಿ ಸಿವಿಲ್ ಕೋರ್ಟ್‌ ಆವರಣದಲ್ಲಿ ‘ಕನ್ನಡ ಮೊದಲು ಅಭಿಯಾನ’ದ ಸದಸ್ಯರು ಹಿಂದಿ ದಿವಸದ ವಿರುದ್ಧ ಕರಪತ್ರಗಳನ್ನು ಹಂಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.