ADVERTISEMENT

ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 20:08 IST
Last Updated 10 ಆಗಸ್ಟ್ 2021, 20:08 IST
ವಿದ್ಯುತ್ ವಲಯದ ಖಾಸಗೀಕರಣ ವಿರೋಧಿಸಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಯಲಹಂಕದ ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು
ವಿದ್ಯುತ್ ವಲಯದ ಖಾಸಗೀಕರಣ ವಿರೋಧಿಸಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಯಲಹಂಕದ ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು   

ಯಲಹಂಕ:ವಿದ್ಯುತ್ ವಲಯವನ್ನು ಖಾಸಗೀರಣ ಮಾಡುವುದನ್ನು ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೀಟರ್‌ಗಳನ್ನು ಅಳವಡಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ, ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ವಿ.ಆರ್.ನಾರಾಯಣರೆಡ್ಡಿ, ‘ರೈತರು ಬೆಳೆದ ಬೆಳಗಳಿಗೆ ಸರಿಯಾದ ಮಾರುಕಟ್ಟೆ ಮತ್ತು ಬೆಂಬಲ ಬೆಲೆ ಸಿಗದೆ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ವಿದ್ಯುತ್ ಖಾಸಗೀಕರಣ ನೀತಿಯನ್ನು ಜಾರಿಗೊಳಿಸುವುದರಿಂದ ಕೃಷಿ ಚಟುವಟಿಕೆಗಳ ಮೇಲೆ ಮಾತ್ರ ಪರಿಣಾಮ ಬೀರದೆ, ಗೃಹಬಳಕೆ ವಿದ್ಯುತ್‌ ಉಪಯೋಗಕ್ಕೂ ಸಮಸ್ಯೆಯಾಗಲಿದೆ. ಬಡವರು ಮತ್ತು ದುರ್ಬಲ ವರ್ಗದವರಿಗೆ ಹೆಚ್ಚಿನ ತೊಂದರೆಯಾಗಲಿದೆ’ ಎಂದರು.

‘ಈಗ ತಿಂಗಳ ವಿದ್ಯುತ್ ಬಿಲ್ ಪಾವತಿಸಲು ಸಮಯಾವಕಾಶವಿರುತ್ತದೆ. ಆದರೆ ಖಾಸಗೀಕರಣ ನೀತಿಯಡಿ ‘ಪ್ರಿಪೇಯ್ಡ್‌’ ಮೀಟರ್ ಅಳವಡಿಸುವುದರಿಂದ ಮೊಬೈಲ್‌ಗೆ ಕರೆನ್ಸಿ ಹಾಕಿದಂತೆ ಹಣ ಪಾವತಿಸಿ ವಿದ್ಯುತ್ ಬಳಸಬೇಕಾಗುತ್ತದೆ. ಅಲ್ಲದೆ ಬಡವರು ಮತ್ತು ದುರ್ಬಲ ವರ್ಗದವರಿಗೆ ಉಚಿತವಾಗಿ ಮತ್ತು ರಿಯಾಯಿತಿ ದರದಲ್ಲಿ ದೊರೆಯುತ್ತಿರುವ ಕೆಲವು ವಿದ್ಯುತ್ ಯೋಜನೆಗಳು ರದ್ದಾಗಲಿವೆ’ ಎಂದರು.

ADVERTISEMENT

ರಾಜ್ಯ ಸಂಘಟನಾ ಕಾರ್ಯದರ್ಶಿ ಹರೀಶ್ ಅದ್ದೆ, ‘ಕೃಷಿ ಉತ್ಪಾದನೆಯ ವೆಚ್ಚ ಭರಿಸಲಾಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ವಿದ್ಯುತ್ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವುದರಿಂದ ಬೆಳೆ ಗಳ ಮಾರಾಟದಿಂದ ಬಂದ ಹಣವನ್ನೆಲ್ಲ ವಿದ್ಯುತ್ ಬಿಲ್ ಪಾವತಿಸು ವುದಕ್ಕೇ ವ್ಯಯಿಸಬೇಕಾಗುತ್ತದೆ’ ಎಂದರು.

ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಸ.ಬಿ.ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷರಾದ ಶಿವಮ್ಮ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.