ಬೆಂಗಳೂರು: ‘ಹಮಾಸ್ ಉಗ್ರರ ದಾಳಿಯನ್ನು ನೆಪವಾಗಿಟ್ಟುಕೊಂಡು ಪ್ಯಾಲೆಸ್ಟೀನ್ ಜನರ ಮೇಲೆ ಇಸ್ರೇಲ್ ದಾಳಿ ಮಾಡುತ್ತಿದೆ. ಇಸ್ರೇಲ್ ವರ್ತನೆಯನ್ನು ಭಾರತ ಸರ್ಕಾರ ಖಂಡಿಸಬೇಕು’ ಎಂದು ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.
‘ಇಸ್ರೇಲ್ ನೀತಿಯನ್ನು ಹಲವು ರಾಷ್ಟ್ರಗಳು ಖಂಡಿಸುತ್ತಿದೆ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಟಸ್ಥವಾಗಿ ಉಳಿದಿದೆ. ಇದು ಖಂಡನೀಯ. ಭಾರತ ಸರ್ಕಾರ, ಪ್ಯಾಲೆಸ್ಟೀನ್ ಪರ ನಿಲ್ಲಬೇಕು. ಪ್ಯಾಲೆಸ್ಟೀನ್ ಪ್ರಜೆಗಳ ಸ್ವಾತಂತ್ರ್ಯ ಮತ್ತು ಅವರ ಉಳಿವಿಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ವಿರುದ್ಧ ಒತ್ತಡ ಹೇರಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಸಾಹಿತಿ ಪುರುಷೋತ್ತಮ ಬಿಳಿಮಲೆ, ‘ಪ್ಯಾಲೆಸ್ಟೀನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ಏರ್ಪಟ್ಟಿದೆ. ಶಸ್ತ್ರಾಸ್ತ್ರ ವಿಚಾರದಲ್ಲಿ ಎರಡೂ ದೇಶಗಳ ನಡುವೆ ಅಸಮಾನತೆ ಇದೆ. ಇಸ್ರೇಲ್ ಹೆಚ್ಚು ಶಸ್ತ್ರಾಸ್ತ್ರ ಉಪಯೋಗಿಸಿ, ದಾಳಿ ಮಾಡುತ್ತಿದೆ’ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ: ‘ಪ್ಯಾಲೆಸ್ಟೀನ್ ಪರ ಕಾರ್ಯಕ್ರಮ, ಸಭೆ, ಪ್ರತಿಭಟನೆ ಹಮ್ಮಿಕೊಳ್ಳಲು ರಾಜ್ಯ ಸರ್ಕಾರ ಹಾಗೂ ಪೊಲೀಸರು ಅನುಮತಿ ನೀಡುತ್ತಿಲ್ಲ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ ಮಾಡಲಾಗುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.