ADVERTISEMENT

ಬೆಂಗಳೂರು: ₹31 ಸಾವಿರ ವೇತನ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2024, 16:29 IST
Last Updated 3 ಸೆಪ್ಟೆಂಬರ್ 2024, 16:29 IST
ನಗರದ ಅರಸು ಭವನದ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯ ಮಾತಿನ ಚಕಮಕಿ ನಡೆಯಿತು ಪ್ರಜಾವಾಣಿ ಚಿತ್ರ: ರಂಜು ಪಿ
ನಗರದ ಅರಸು ಭವನದ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯ ಮಾತಿನ ಚಕಮಕಿ ನಡೆಯಿತು ಪ್ರಜಾವಾಣಿ ಚಿತ್ರ: ರಂಜು ಪಿ   

ಬೆಂಗಳೂರು: ತಿಂಗಳಿಗೆ ಕನಿಷ್ಠ ₹31 ಸಾವಿರ ವೇತನ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಅರಸು ಭವನದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಇಲಾಖೆ ಬಾಕಿ ಉಳಿಸಿಕೊಂಡಿರುವ ಸಂಬಳವನ್ನು ಕೂಡಲೇ ಪಾವತಿಸಬೇಕು. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ (ಬಿಸಿಎಂ) ಕೆಲಸ ಕಳೆದುಕೊಂಡ ಹೊರಗುತ್ತಿಗೆ ಸಿಬ್ಬಂದಿಯನ್ನು ಮರು ನೇಮಿಸಿಕೊಳ್ಳಬೇಕು. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಇರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸಿಬ್ಬಂದಿ ಹೆಚ್ಚಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಸೇವಾ ಭದ್ರತೆ ಒದಗಿಸಬೇಕು ಮತ್ತು ಕಾರ್ಮಿಕ ಕಾನೂನು ಪ್ರಕಾರ ಎಲ್ಲರಿಗೂ ವಾರದ ರಜೆ ನೀಡಬೇಕು. ಕೆಲಸದ ಸಮಯ ನಿಗದಿಪಡಿಸಬೇಕು. ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ ನೀಡಬೇಕು. ಅಡುಗೆ ಕೋಣೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ವಸತಿನಿಲಯಗಳ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು. 

ADVERTISEMENT

ವಸಂತನಗರದ ಅರಸುಭವನದ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.