ADVERTISEMENT

ಸಿಎಂ ಮನೆ ಎದುರು ಮಹಿಳೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 16:59 IST
Last Updated 8 ಆಗಸ್ಟ್ 2021, 16:59 IST

ಬೆಂಗಳೂರು: ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಬೇರೆ ನಿರೂಪಕರಿಗೂ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ದೂರದರ್ಶನದ ರಂಗಭೂಮಿ ಕಲಾವಿದೆ ವಿ.ಗಿರಿಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸ ಎದುರು ಭಾನುವಾರ ಏಕಾಂಗಿ ಪ್ರತಿಭಟನೆ ನಡೆಸಿದರು.

‘ಹಲವು ವರ್ಷಗಳಿಂದ ಈ ಕಾರ್ಯಕ್ರಮಗಳಿಗೆ ನಿರೂಪಕರನ್ನು ಬದಲಾವಣೆ ಮಾಡಿಲ್ಲ. ಕೆಲವೇ ನಿರೂಪಕರಿಗೆ ನಿರಂತರವಾಗಿ ನಿರೂಪಣೆಯ ಅವಕಾಶ ಕಲ್ಪಿಸಲಾಗುತ್ತಿದೆ. ಈ ಬಾರಿಯೂ ಅದೇ ನಿರೂಪಕರಿಗೆ ಅವಕಾಶ ನೀಡಲಾಗಿದೆ’ ಎಂದು ದೂರಿದರು.

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲಾಧಿಕಾರಿ ಸೇರಿದಂತೆ, ಈ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಈ ಸಂಬಂಧ ದೂರು ನೀಡಿದ್ದೇನೆ. ಹಲವು ವರ್ಷಗಳಿಂದ ಓಡಾಡುತ್ತಿದ್ದೇನೆ. ಆದರೂ ನನ್ನ ಮನವಿಗೆ ಉತ್ತರ ಸಿಕ್ಕಿಲ್ಲ. ಈ ಬಾರಿ ಹೊಸಬರಿಗೆ ಅವಕಾಶ ಕಲ್ಪಿಸಬೇಕು’ ಎಂದು ಫಲಕ ಹಿಡಿದು ಪ್ರತಿಭಟನೆ ನಡೆಸಿದರು.

ADVERTISEMENT

ಪ್ರತಿಭಟನೆ ವೇಳೆಗಿರಿಜಾ ಅವರನ್ನು ಪೊಲೀಸರು ತಡೆದರು. ಆದರೂ ಪ್ರತಿಭಟನೆ ಮುಂದುವರಿಸಿದ್ದರಿಂದ ಅವರನ್ನು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.