ADVERTISEMENT

ಪ್ರತಿಭಟನೆಯಿಂದ ಸಂಚಾರ ದಟ್ಟಣೆ: ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 2:44 IST
Last Updated 6 ಮಾರ್ಚ್ 2021, 2:44 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಪ್ರತಿಭಟನೆ ಮತ್ತು ರ್‍ಯಾಲಿಗಳಿಂದ ಉಂಟಾಗುವ ಸಂಚಾರ ದಟ್ಟಣೆ ಸಂಬಂಧ ಹೈಕೋರ್ಟ್‌ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.

ಹಲವು ಪ್ರತಿಭಟನೆಗಳಿಂದ ಮಾರ್ಚ್ 2ರಂದು ಬೆಳಿಗ್ಗೆ ಸಂಚಾರಕ್ಕೆ ಆಗಿದ್ದ ತೊಂದರೆ ಕುರಿತ ಪತ್ರಿಕಾ ವರದಿ ಉಲ್ಲೇಖಿಸಿ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು ಮುಖ್ಯ ನ್ಯಾಯಮೂರ್ತಿ ಅವರಿಗೆ ಪತ್ರ ಬರೆದಿದ್ದರು. ಪತ್ರವನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸುವಂತೆ ಅವರು ಮನವಿ ಮಾಡಿದ್ದರು. ಅದನ್ನು ಆಧರಿಸಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.

‘ಕೇಂದ್ರ ಸರ್ಕಾರದ ವಸತಿ ಇಲಾಖೆಯ ಸೂಚ್ಯಂಕದಲ್ಲಿ ಬೆಂಗಳೂರನ್ನು ಅತ್ಯಂತ ವಾಸಯೋಗ್ಯ ನಗರವೆಂದು ಹೇಳಲಾಗಿದೆ. ಆದ್ದರಿಂದ, ನಗರದಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಸಂಬಂಧಪಟ್ಟ ಎಲ್ಲರ ಜವಾದ್ದಾರಿ. ಬೆಳಿಗ್ಗೆ ಮತ್ತು ಸಂಜೆ ವೇಳೆ ನಗರದ ಹೃದಯಭಾಗದಲ್ಲಿ ಸಂಚಾರ ದಟ್ಟಣೆ ನಿಭಾಯಿಸುವುದು ಸವಾಲಿನ ಕೆಲಸ’ ಎಂದು ಪೀಠ ಹೇಳಿತು.

ADVERTISEMENT

‘ಪ್ರತಿಭಟನೆಗಳಿಂದಾಗಿ ನಗರದಲ್ಲಿ ಇತ್ತೀಚೆಗೆ ಹಲವು ಬಾರಿ ನಾಗರಿಕರು ತೊಂದರೆ ಅನುಭವಿಸಿದ್ದಾರೆ. ಶಾಂತಿಯುತ ಪ್ರತಿಭಟನೆ ನಡೆಸುವುದು ಅವರ ಮೂಲಭೂತ ಹಕ್ಕಾಗಿದ್ದರೂ ಅದು ಇತರರ ಹಕ್ಕುಗಳ ಮೇಲೆ ಪರಿಣಾಮ ಬೀರಬಾರದು. ಪ್ರತಿಭಟನೆಗೆ ಗೊತ್ತುಪಡಿಸಿದ ಸ್ಥಳವಾದ ಸ್ವಾತಂತ್ರ್ಯ ಉದ್ಯಾನವನ್ನು ಅದಕ್ಕೆ ಬಳಸಿಕೊಳ್ಳಬೇಕು’ ಎಂದು ಪೀಠ ತಿಳಿಸಿತು.

ರಾಜ್ಯ ಸರ್ಕಾರ, ಬೆಂಗಳೂರು ನಗರ ಪೊಲೀಸ್ ಕಮಿಷನರ್, ಬಿಬಿಎಂಪಿ, ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಮಾಡಲು ರಿಜಿಸ್ಟ್ರಾರ್ ಅವರಿಗೆ ಪೀಠ ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.