ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಉದ್ದೇಶಿತ ಪೆರಿಫೆರಲ್ ವರ್ತುಲ ರಸ್ತೆ (ಬೆಂಗಳೂರು ಬ್ಯುಸಿನೆಸ್ ಕಾರಿಡಾರ್) ಯೋಜನೆಗೆ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಜಮೀನುಗಳಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದರೆ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದು ಪಿಆರ್ಆರ್ ರೈತ ಹಾಗೂ ನಿವೇಶನದಾರರ ಸಂಘ ಎಚ್ಚರಿಕೆ ನೀಡಿದೆ.
ಪಿಆರ್ಆರ್ ಯೋಜನೆಗೆ 2005ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿ, 2007ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. 2013ರ ಹೊಸ ಭೂ ಸ್ವಾಧೀನ ಕಾಯ್ದೆಯಂತೆ ಪರಿಹಾರ ಹಾಗೂ ಪುನವರ್ಸತಿ ಕಲ್ಪಿಸುವಂತೆ ಸರ್ಕಾರ ಹಾಗೂ ಬಿಡಿಎಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿ, ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಾವಳಿಪುರ ಶ್ರೀನಿವಾಸ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಮೀನಿನ ಮಾಲೀಕರಿಗೆ ಭೂ ಸ್ವಾಧೀನ ಮತ್ತು ಪರಿಹಾರ ಕಾಯ್ದೆ 2013ರಂತೆ ಪರಿಹಾರ ನೀಡಲಾಗುವುದು ಎಂದು 2024ರ ಸೆಪ್ಟೆಂಬರ್ 12ರಂದು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿತ್ತು. ಒಂಬತ್ತು ದಿನದ ಬಳಿಕ, ಸೆಪ್ಟೆಂಬರ್ 21ರಂದು ಈ ಆದೇಶ ರದ್ದುಗೊಳಿಸಿ, ಭೂ ಸ್ವಾಧೀನ ಕಾಯ್ದೆ 1894ರ ಅನ್ವಯ ಪರಿಹಾರ ನೀಡುವಂತೆ ಆದೇಶಿಸಲಾಗಿತ್ತು ಎಂದು ವಿವರಿಸಿದರು.
ಇಲಾಖೆಯ ಈ ಕ್ರಮವು ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ. ರೈತ ಕುಟುಂಬಗಳು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಕಾಣದೆ ವಂಚಿತವಾಗಿವೆ. ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಭೂ ಮಾಲೀಕರಿಗೆ ನೋಟಿಸ್ ನೀಡಲಾಗುತ್ತಿದೆ. ಬಲವಂತವಾಗಿ ಸಂಧಾನ ಪತ್ರಕ್ಕೆ ರೈತರಿಂದ ಸಹಿ ಮಾಡಿಸಿಕೊಳ್ಳಲು ಅಧಿಕಾರಿಗಳು ಆರಂಭಿಸಿದ್ದಾರೆ ಎಂದು ಆರೋಪಿಸಿದರು.
2013ರ ಕಾಯ್ದೆಯಂತೆ ಪರಿಹಾರ ಹಾಗೂ ಪುನರ್ವಸತಿ ಅಥವಾ ಈಗಿನ ಪ್ರಸ್ತುತ ಮಾರುಕಟ್ಟೆ ಬೆಂಬಲ ಬೆಲೆಗೆ ಅನುಗುಣವಾಗಿ ಸೂಕ್ತ ಪರಿಹಾರ ನೀಡುವಂತೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಇಲ್ಲವಾದರೆ ಯೋಜನೆಗೆ ಒಳಪಡುವ ಜಮೀನಿನ ರೈತರು, ದಲಿತ ಕುಟುಂಬಗಳೊಂದಿಗೆ ಜೈಲ್ ಭರೋ ಚಳವಳಿ ಹಮ್ಮಿಕೊಂಡು ಯೋಜನೆ ರದ್ದತಿಗೆ ಒತ್ತಾಯಿಸಲಾಗುವುದು ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.