ಬೆಂಗಳೂರು: ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದ ಸಂತ್ರಸ್ತೆಯ ಮೃತದೇಹ ಸಾಗಿಸಲು ಹಣವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಕ್ಕೆ ಬ್ಯಾಡರಹಳ್ಳಿ ಠಾಣೆ ಪಿಎಸ್ಐ ವಸೀಂವುಲ್ಲಾ ₹ 14 ಸಾವಿರ ಸಹಾಯ ಮಾಡಿದ್ದಾರೆ.
ಹೊರ ರಾಜ್ಯದ ಯುವತಿ, ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದರು. ಅವರನ್ನು ಕೊಠಡಿಗೆ ಕರೆಸಿಕೊಂಡಿದ್ದ ಸ್ನೇಹಿತ, ಅತ್ಯಾಚಾರ ಎಸಗಿದ್ದ. ನಂತರ ಪ್ರಜ್ಞೆ ಕಳೆದುಕೊಂಡ ಯುವತಿ ಸಾವಿಗೀಡಾಗಿದ್ದರು. ಈ ಸಂಬಂಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನೂ ಪೊಲೀಸರು ಬಂಧಿಸಿದ್ದರು.
‘ಸಂತ್ರಸ್ತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿತ್ತು. ಆರ್ಥಿಕವಾಗಿ ತೊಂದರೆಯಲ್ಲಿದ್ದ ಕುಟುಂಬಕ್ಕೆ, ಮೃತದೇಹವನ್ನು ಆಂಬುಲೆನ್ಸ್ನಲ್ಲಿ ಸಾಗಿಸಲು ಬೇಕಾದಷ್ಟು ಹಣವಿರಲಿಲ್ಲ. ಹೀಗಾಗಿ, ಆಸ್ಪತ್ರೆಯಲ್ಲೇ ಮೃತದೇಹ ಇರಿಸಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಪ್ರಕರಣದ ತನಿಖಾ ತಂಡದಲ್ಲಿದ್ದ ಪಿಎಸ್ಐ ವಸೀಂವುಲ್ಲಾ, ಕುಟುಂಬದವರ ಯಾತನೆ ಕಂಡು ಹಣದ ಸಹಾಯ ಮಾಡಿದ್ದಾರೆ. ನಂತರ ಕುಟುಂಬದವರು ಮೃತದೇಹವನ್ನು ತಮ್ಮೂರಿಗೆ ತೆಗೆದುಕೊಂಡು ಹೋಗಿದ್ದಾರೆ’ ಎಂದೂ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.