ಬೆಂಗಳೂರು: ‘545 ಪಿಎಸ್ಐ ನೇಮಕಾತಿಯ ಮರುಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು’ ಎಂದು ಒತ್ತಾಯಿಸಿ ಕೆಲ ಅಭ್ಯರ್ಥಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು. ಸಮತಾ ಸೈನಿಕ ದಳ ಪದಾಧಿಕಾರಿಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದರು.
‘ಪಿಎಸ್ಐ ನೇಮಕಾತಿ ಪರೀಕ್ಷೆಗೆಂದು ಹಲವು ವರ್ಷಗಳಿಂದ ಅಧ್ಯಯನ ನಡೆಸುತ್ತಿದ್ದೇವೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಬೇಡಿ. ನೇಮಕಾತಿ ಆದೇಶ ನೀಡಿ. ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಅಭ್ಯರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಮುಖ್ಯಮಂತ್ರಿ ಭೇಟಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮನವಿ ಪತ್ರ ಸ್ವೀಕರಿಸಿದರು.
‘ಪಿಎಸ್ಐ ನೇಮಕಾತಿ ಅಕ್ರಮ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆಲ್ಲ ಶಿಕ್ಷೆ ಖಂಡಿತ. ತನಿಖೆ ಪೂರ್ಣ ಆಗುವವರೆಗೂ ಅಭ್ಯರ್ಥಿಗಳು ಧೃತಿ ಕಳೆದುಕೊಳ್ಳಬಾರದು. ಸದ್ಯಕ್ಕೆ ಯಾವುದೇಭರವಸೆ ನೀಡಲಾಗದು’ ಎಂದು ಬೊಮ್ಮಾಯಿ ಸಮಾಧಾನ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.