ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜೂನ್ 29ರವರೆಗೆ ಕಸ್ಟಡಿಗೆ ಪಡೆದಿದ್ದಾರೆ.
‘ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 5ನೇ ರ್ಯಾಂಕ್ ಪಡೆದಿದ್ದ ದರ್ಶನ್ ಗೌಡ, ಲಕ್ಷಾಂತರ ರೂಪಾಯಿ ಕೊಟ್ಟು ಒಎಂಆರ್ ಪ್ರತಿ ತಿದ್ದಿಸಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿತ್ತು. ಈತನ ವಿರುದ್ಧ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಶಾಂತಕುಮಾರ್ ಅವರ ಪಾತ್ರದ ಬಗ್ಗೆಯೂ ಸುಳಿವು ಸಿಕ್ಕಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.
‘ನ್ಯಾಯಾಂಗ ಬಂಧನದಲ್ಲಿದ್ದ ಶಾಂತಕುಮಾರ್, ವಿಭಾಗದ ನೌಕರರಾದ ಶ್ರೀಧರ್, ಶ್ರೀನಿವಾಸ್ ಅವರನ್ನು ಯಲಹಂಕ ನ್ಯೂ ಟೌನ್ ಪ್ರಕರಣದಲ್ಲಿ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದೆ‘ ಎಂದು ತಿಳಿಸಿವೆ.
ಅಗತ್ಯವಿದ್ದರೆ ಮತ್ತೊಮ್ಮೆ ನೋಟಿಸ್: ‘ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮ್ರಿತ್ ಪೌಲ್ ಅವರನ್ನು ಗುರುವಾರ ವಿಚಾರಣೆ ನಡೆಸಿ ಹೇಳಿಕೆ ಪಡೆದು ಕಳುಹಿಸಲಾಗಿದೆ. ಅಗತ್ಯವಿದ್ದರೆ, ಮತ್ತೊಮ್ಮೆ ವಿಚಾರಣೆಗಾಗಿ ನೋಟಿಸ್ ನೀಡಲಾಗುವುದು’ ಎಂದು ಸಿಸಿಬಿ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.