ADVERTISEMENT

ಪಿಎಸ್‌ಐ ಅಕ್ರಮ: ಎಚ್‌ಡಿಕೆ, ಅಶ್ವತ್ಥ, ಯತ್ನಾಳ್‌ಗೆ ಸಮನ್ಸ್

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2023, 23:35 IST
Last Updated 26 ಡಿಸೆಂಬರ್ 2023, 23:35 IST
ಎಚ್‌.ಡಿ ಕುಮಾರಸ್ವಾಮಿ
ಎಚ್‌.ಡಿ ಕುಮಾರಸ್ವಾಮಿ    

ಬೆಂಗಳೂರು: ಪಿಎಸ್‌ಐ 545 ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ಶಾಸಕರಾದ ಸಿ.ಎನ್. ಅಶ್ವತ್ಥನಾರಾಯಣ್, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಬಸವರಾಜ ಧಡೇಸೂಗುರು ಸೇರಿದಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಪಿಎಸ್‌ಐ ನೇಮಕಾತಿ ಅಕ್ರಮದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗ ವಿಚಾರಣೆ ನಡೆಸುತ್ತಿದೆ. ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕುವುದಕ್ಕಾಗಿ ಸಮನ್ಸ್ ಜಾರಿ ಮಾಡಿರುವುದಾಗಿ ಗೊತ್ತಾಗಿದೆ.

ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಆರೋಪದಡಿ ಕಾನ್‌ಸ್ಟೆಬಲ್‌ ಸಿ.ಎಸ್. ನಾಗೇಶ್‌ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಈತ, ಸಿ.ಎನ್‌. ಅಶ್ವತ್ಥನಾರಾಯಣ ಅವರ ಸಂಬಂಧಿ ಎಂಬುದಾಗಿ ಸುದ್ದಿಯಾಗಿತ್ತು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ಅಕ್ರಮದ ಬಗ್ಗೆ ಮಾತನಾಡಿದ್ದರು. ಅಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ ಧಡೇಸೂಗುರು ಭಾಗಿಯಾದ ಬಗ್ಗೆ ವಿಡಿಯೊಗಳು ಹರಿದಾಡಿದ್ದವು.

ADVERTISEMENT

‘ಪಿಎಸ್‌ಐ ಅಕ್ರಮದ ಬಗ್ಗೆ ಕುಮಾರಸ್ವಾಮಿ, ಅಶ್ವತ್ಥನಾರಾಯಣ್ ಹಾಗೂ ಅವರ ಸೋದರ ಸತೀಶ್, ಯತ್ನಾಳ, ಬಸವರಾಜ ಧಡೇಸೂಗುರು ಇತರರನ್ನು ವಿಚಾರಣೆ ನಡೆಸಬೇಕು’ ಎಂದು ಕೋರಿ ಕೆಲ ವಕೀಲರು ಆಯೋಗಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ, ಎಲ್ಲರಿಗೂ ಇದೀಗ ಸಮನ್ಸ್ ನೀಡಲಾಗಿದೆ.

ಆಯೋಗದ ಎದುರು ಬುಧವಾರ ಬೆಳಿಗ್ಗೆ ಖುದ್ದಾಗಿ ಅಥವಾ ವಕೀಲರ ಜೊತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.