ಬೆಂಗಳೂರು: ‘ದ್ವಿತೀಯ ಪಿಯು ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸುವುದಕ್ಕಾಗಿಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು ಮಾತ್ರವೇ ಒಂದು ಬೇಸಿಕ್ ಮೊಬೈಲ್ ಸೆಟ್ ಬಳಸಲು ಅವಕಾಶವಿದ್ದು, ಇತರರಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ಬುಧವಾರ ಇಲ್ಲಿನ ಶ್ರೀ ರೇಣುಕಾಚಾರ್ಯ ಕಾನೂನು ಕಾಲೇಜಿನಲ್ಲಿಬೆಂಗಳೂರು ವಿಭಾಗದ ಪಿಯು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಮತ್ತು ಸೂಪರಿಟೆಂಡೆಂಟ್ಗಳತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಈ ಬಾರಿ ರಾಜ್ಯಮಟ್ಟದಲ್ಲಿ ವಿಶೇಷ ವಿಚಕ್ಷಣೆಯೊಂದಿಗೆ ಜಿಲ್ಲಾ ಮಟ್ಟದಲ್ಲೂ ನಿಯಂತ್ರಣ ಕೊಠಡಿಗಳಲ್ಲಿ ಸಿಸಿ ಟಿವಿ ಮೂಲಕ 24 ಗಂಟೆಯೂ ನಿರಂತರವಾಗಿ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.
‘ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಪರೀಕ್ಷಾ ಕೆಲಸಗಳಲ್ಲಿ ತೊಡಗಿದವರಿಗೆ ಪರೀಕ್ಷಾ ಗುರುತಿನ ಚೀಟಿ ನೀಡಲಾಗುತ್ತದೆ. ಗುರುತಿನ ಚೀಟಿ ಇಲ್ಲದವರಿಗೆಪರೀಕ್ಷಾ ಕೇಂದ್ರದೊಳಗೆ ಇಲ್ಲವೇ ಪರೀಕ್ಷಾ ಕೇಂದ್ರದ ಸುತ್ತಮುತ್ತ ಓಡಾಟಕ್ಕೆ ಅವಕಾಶ ಇಲ್ಲ’ ಎಂದು ಸಚಿವರು ಹೇಳಿದರು.
‘ವಿಶೇಷ ರಕ್ಷಣಾ ಲಕ್ಷಣಗಳು ಇರುವ 40 ಪುಟಗಳ ಉತ್ತರ ಪತ್ರಿಕೆಗಳನ್ನು ಈಗಾಗಲೇ ಸರಬರಾಜು ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಸಾಮಗ್ರಿ ರವಾನೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಸಂಬಂಧಿಸಿದ ಮೌಲ್ಯಮಾಪನ ಕೇಂದ್ರಕ್ಕೆ ಉತ್ತರಪತ್ರಿಕೆ ರವಾನೆಯ ವಾಹನಗಳ ಚಲನವಲನಗಳ ಮೇಲೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗುವ ವಿಚಕ್ಷಣಾ ಕೇಂದ್ರದಿಂದಲೇ ವೀಕ್ಷಣೆ ಹಾಗೂ ನಿಯಂತ್ರಣ ಮಾಡಲಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.