ಮಹದೇವಪುರ ವಿಧಾನಸಭಾ ಕ್ಷೇತ್ರದ ಎಸ್.ಎಂ. ಕೃಷ್ಣ ವಾರ್ಡ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ಅನನುಕೂಲವಾಗಿದೆ. ಈ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ, ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವ ಕಾರಣ ಸಂಚಾರ ದಟ್ಟಣೆ ಆಗುತ್ತಿದೆ. ಇದರ ಜೊತೆಗೆ ಅಪಘಾತಗಳು ಸಂಭವಿಸುತ್ತಿವೆ. ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವಂತೆ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ.
-ರಘು, ಎಸ್.ಎಂ. ಕೃಷ್ಣ ವಾರ್ಡ್
ಶಾಂತಿನಗರ ವಿಧಾನಸಭಾ ಕ್ಷೇತ್ರದ ಅಶೋಕ ನಗರದ ವಾರ್ಡ್ ಸಂಖ್ಯೆ 25ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಇಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಲ್ಲಿ ತ್ಯಾಜ್ಯ ನೀರು ತುಂಬಿಕೊಂಡಿದೆ. ಈ ಗುಂಡಿಯಲ್ಲಿ ದ್ವಿಚಕ್ರ ವಾಹನ ಸವಾರರು ಬಿದ್ದು, ಕೈ ಕಾಲು ಮುರಿದುಕೊಂಡಿರುವ ಘಟನೆಗಳು ನಡೆದಿವೆ. ರಸ್ತೆ ಗುಂಡಿ ಮುಚ್ಚುವಂತೆ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸುತ್ತಿಲ್ಲ. ಕೂಡಲೇ ರಸ್ತೆ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.
-ಸುಭಾಷ್, ಅಶೋಕನಗರ
ಕೆಂಪೇಗೌಡ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಎರಡನೇ ಅಡ್ಡರಸ್ತೆಯ ಪಾದಚಾರಿ ಮಾರ್ಗದಲ್ಲಿ ರಾಶಿಗಟ್ಟಲೆ ಕಸ ತಂದು ಹಾಕಲಾಗಿದೆ. ಇದರಿಂದ ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಟ್ಟಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ. ಸಂಬಂಧಪಟ್ಟ ಪಾಲಿಕೆಯ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇಲ್ಲಿ ಹಾಕಿರುವ ತ್ಯಾಜ್ಯವನ್ನು ಪಾಲಿಕೆ ಸಿಬ್ಬಂದಿ ಕೂಡಲೇ ವಿಲೇವಾರಿ ಮಾಡಬೇಕು.
-ಶಿವಪ್ರಸಾದ್ ಎಸ್., ಪಾದಚಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.