
ಬೆಂಗಳೂರು: ನಗರದಲ್ಲಿ ಡಿ.21ರಿಂದ 24ರವರೆಗೆ ‘ರಾಷ್ಟ್ರೀಯ ಪಲ್ಸ್ ಪೋಲಿಯೊ’ ಕಾರ್ಯಕ್ರಮದ ಭಾಗವಾಗಿ ‘ಮೈಕ್ರೋ ಪ್ಲಾನ್’ ಸಿದ್ಧಪಡಿಸಲು ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.
ಆರೋಗ್ಯ ವಿಭಾಗ ಹಾಗೂ ಕಲ್ಯಾಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಪಲ್ಸ್ ಪೋಲಿಯೊ ಕುರಿತು ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ರೂಪಿಸಬೇಕು. ನರ್ಸಿಂಗ್ ಕಾಲೇಜುಗಳು, ವೈದ್ಯಕೀಯ ಕಾಲೇಜುಗಳು, ಪ್ಯಾರಾಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಸ್ವಯಂಸೇವಕರನ್ನಾಗಿ ಬಳಸಿಕೊಂಡು ಪೋಲಿಯೊ ಹನಿ ಹಾಕಬೇಕು’ ಎಂದು ಹೇಳಿದರು.
ಸಂಚಾರ ಲಸಿಕಾ ತಂಡಗಳನ್ನು ನಗರದ ಬಸ್ ನಿಲ್ದಾಣ, ಮಾರುಕಟ್ಟೆ, ರೈಲ್ವೆ ಮತ್ತು ಮೆಟ್ರೊ ನಿಲ್ದಾಣ, ಮಾಲ್, ಪ್ರಮುಖ ಉದ್ಯಾನಗಳು, ಕೊಳಚೆ ಪ್ರದೇಶಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಪೋಲಿಯೊ ಹನಿ ಹಾಕುವಂತೆ ಸೂಚಿಸಿದರು.
ವಿಶೇಷ ಆಯುಕ್ತರ ಸುರೋಳ್ಕರ್ ವಿಕಾಸ್ ಕಿಶೋರ್ ಮಾತನಾಡಿ, ‘ಡಿ.21ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಬೂತ್ಗಳಲ್ಲಿ ಲಸಿಕೆ ಹಾಕಲಾಗುವುದು. 22ರಿಂದ 24ರವರೆಗೆ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು. ಇದಲ್ಲದೆ, 21ರಿಂದ 24ರವರೆಗೆ ಹೆಚ್ಚು ಜನದಟ್ಟಣೆ ಹೊಂದಿರುವ ಪ್ರದೇಶ, ಕೊಳೆಗೇರಿ, ವಲಸಿಗರ ಮೇಲೆ ಹೆಚ್ಚು ಗಮನ ನೀಡುವ ಕೆಲಸ ಮಾಡಲಾಗುವುದೆಂದು’ ತಿಳಿಸಿದರು.
ನವಜಾತ ಶಿಶುವಿನಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಹನಿ ನೀಡಬೇಕು. ನಮ್ಮ ಕ್ಲಿನಿಕ್, ಪ್ರಾಥಮಿಕ ಆರೋಗ್ಯ ಕೇಂದ್ರ, ಹೆರಿಗೆ ಆಸ್ಪತ್ರೆ, ರೆಫರಲ್ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುತ್ತದೆ ಎಂದು ಹೇಳಿದರು.
ಇ–ಖಾತಾಗೆ ದೂರವಾಣಿ: ಇ-ಖಾತಾ ವಿತರಣೆ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಹಾಗೂ ಆಸ್ತಿ ತೆರಿಗೆಗೆ ಸಂಬಂಧಿಸಿದ ದೂರುಗಳಿಗಾಗಿ ಪ್ರತ್ಯೇಕ ದೂರವಾಣಿ 94806 83035 ಇದ್ದು, ಅದಕ್ಕೆ ಬರುವ ದೂರುಗಳನ್ನು ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಬೇಕು ಎಂದು ಮಹೇಶ್ವರ್ ರಾವ್ ಸೂಚಿಸಿದರು.
ಇ-ಖಾತಾ ಸಹಾಯವಾಣಿಗೆ ಬರುವ ದೂರುಗಳನ್ನು ಪ್ರತ್ಯೇಕವಾಗಿ ಮೇಲ್ವಿಚಾರಣೆ ಮಾಡಬೇಕು. ತಿರಸ್ಕೃತವಾಗಿರುವ ಇ-ಖಾತಾ ಅರ್ಜಿಗಳನ್ನು ಯಾವ ಕಾರಣಕ್ಕಾಗಿ ತಿರಸ್ಕರಿಸಲಾಗಿದೆ ಎಂಬುದನ್ನು ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮಾತನಾಡಿ, ‘ಇ-ಖಾತಾಗೆ ಸಂಬಂಧಿಸಿದಂತೆ ಪ್ರತಿನಿತ್ಯ ಸುಮಾರು 1,000 ಕರೆಗಳು ಬರುತ್ತಿದ್ದು, ಅವುಗಳನ್ನು ಟ್ರ್ಯಾಕ್ ಮಾಡಿ ಇರುವ ಸಮಸ್ಯೆ ಬಗೆಹರಿಸಿ ಆದ್ಯತೆ ಮೇರೆಗೆ ವಿಲೇವಾರಿ ಮಾಡುವ ಕೆಲಸ ಮಾಡಲಾಗುತ್ತಿದೆ’ ಎಂದು ತಿಳಿಸಿದರು.
‘ಸರಿಯಾದ ಕಾರಣಗಳಿಲ್ಲದೆ ಇ-ಖಾತಾ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ. ಈ ಸಂಬಂಧ ಯಾವ ಕಾರಣಗಳಿಗಾಗಿ ತಿರಸ್ಕರಿಸಿದ್ದಾರೆ ಎಂಬುದನ್ನು ಪರಿಶೀಲಿಸಿ ಪಾಲಿಕೆವಾರು ಆ ಮಾಹಿತಿಯನ್ನು ನೀಡಲು ಕ್ರಮ ವಹಿಸಲಾಗುವುದು. ಅದರ ಅನುಸಾರ ಬಾಕಿಯಿರುವ ಇ-ಖಾತಾಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೆ ಸಹಕಾರಿಯಾಗಲಿದೆ’ ಎಂದು ಹೇಳಿದರು.
‘ಸ್ವಚ್ಛತಾ ಸಿಬ್ಬಂದಿಗೆ ಕಾನೂನು ಪ್ರಕಾರ ಸಿಗಬೇಕಾದ ಸೌಲಭ್ಯಗಳಲ್ಲಿ ಯಾವುದೇ ರಾಜಿ ಇಲ್ಲ. ಪೌರಕಾರ್ಮಿಕರ ಹಲವು ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು’ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು, ಲೋಡರ್ಸ್, ಕ್ಲೀನರ್ಗಳು, ಆಟೊ ಟಿಪ್ಪರ್ ಚಾಲಕರು ಮತ್ತು ಇನ್ನಿತರೆ ಸ್ವಚ್ಛತಾ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.
ಸಂವಾದದ ವೇಳೆ ಸ್ವಚ್ಛತಾ ಕಾರ್ಮಿಕರು ಸೌಲಭ್ಯಗಳ ಕೊರತೆ, ನೇಮಕಾತಿಗೆ ಸಂಬಂಧಿಸಿದ ತೊಂದರೆಗಳು, ಮೃತ ಪೌರ ಕಾರ್ಮಿಕರಿಗೆ ಪರಿಹಾರ ವಿಳಂಬ, ಪಿಎಫ್ ಸಂಬಂಧಿತ ಸಮಸ್ಯೆ, ಬಯೊಮೆಟ್ರಿಕ್ ಹಾಜರಾತಿ, ವೇತನ ಬಾಕಿ, ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿ ಸಮಸ್ಯೆ ಮುಂತಾದವುಗಳ ಬಗ್ಗೆ ಅಧ್ಯಕ್ಷರ ಗಮನಕ್ಕೆ ತಂದರು. ಪ್ರತಿ ವಿಷಯವನ್ನೂ ಗಂಭೀರವಾಗಿ ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.