ADVERTISEMENT

ಹೊರವರ್ತುಲ ರಸ್ತೆಗೆ ಪುನೀತ್‌ ಹೆಸರು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2023, 10:56 IST
Last Updated 6 ಫೆಬ್ರುವರಿ 2023, 10:56 IST
ಆರ್‌. ಅಶೋಕ
ಆರ್‌. ಅಶೋಕ   

ಬೆಂಗಳೂರು: ನಾಯಂಡಹಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್‌ವರೆಗಿನ ಹೊರವರ್ತುಲ ರಸ್ತೆಗೆ ‘ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌’ ಹೆಸರು ಇಡಲು ರಾಜ್ಯ ಸರ್ಕಾರ ಗೆಜೆಟ್‌ ಹೊರಡಿಸಿದ್ದು, ರಸ್ತೆಯ ನಾಮಕರಣ ಕಾರ್ಯಕ್ರಮ ಫೆ.7ರಂದು ನಡೆಯಲಿದೆ.

‘ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಮೈದಾನದಲ್ಲಿ ಫೆ.7ರಂದು ಸಂಜೆ 6ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಸ್ತೆಯ ನಾಮಫಲಕವನ್ನು ಉದ್ಘಾಟಿಸಲಿದ್ದಾರೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಸೋಮವಾರ ತಿಳಿಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಆಯೋಜನೆ ಮಾಡಿರುವ ಈ ಕಾರ್ಯಕ್ರಮದಲ್ಲಿ ನಟರಾದ ಶಿವರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ಹಾಗೂ ಪುನೀತ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉಪಸ್ಥಿತರಿರಲಿದ್ದಾರೆ. ಚಿತ್ರರಂಗದ ಕಲಾವಿದರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದರು. ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್‌ ಉಪಸ್ಥಿತರಿದ್ದರು.

ADVERTISEMENT

ಲಾಂಛನ ಅನಾವರಣ: ರಸ್ತೆ ನಾಮಕರಣ ಕಾರ್ಯಕ್ರಮದಲ್ಲೇ ಮಾರ್ಚ್‌ನಲ್ಲಿ ನಡೆಯಲಿರುವ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನೂ ಮುಖ್ಯಮಂತ್ರಿಗಳು ಅನಾವರಣ ಮಾಡಲಿದ್ದಾರೆ ಎಂದು ಅಶೋಕ ತಿಳಿಸಿದರು. ‘ಚಿತ್ರೋತ್ಸವಕ್ಕೆ ರಾಜ್ಯ ಸರ್ಕಾರ ಈಗಾಗಲೇ ₹4 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಖ್ಯಾತ ಕಲಾವಿದರಾದ ರೇಖಾ, ಚಿರಂಜೀವಿ ಹೀಗೆ ಉದ್ಘಾಟನೆಗೆ ಹಲವು ಹೆಸರುಗಳ ಶಿಫಾರಸು ಆಗಿದೆ. ಹೆಚ್ಚಿನ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ’ ಎಂದರು. ಮಾರ್ಚ್‌ 3ರಂದೇ ಚಿತ್ರೋತ್ಸವದ ಉದ್ಘಾಟನೆ ನಡೆಯಲಿದೆಯೇ ಎನ್ನುವ ಪ್ರಶ್ನೆಗೆ ‘ತಯಾರಿ ನಡೆಯುತ್ತಿದೆ’ ಎಂದಷ್ಟೇ ಅವರು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.