ADVERTISEMENT

ಮಳೆ ಅಬ್ಬರ: ಅನರ್ಹರ ಆರು ಕ್ಷೇತ್ರಗಳು ಅನಾಥ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2019, 20:00 IST
Last Updated 8 ಆಗಸ್ಟ್ 2019, 20:00 IST
   

ಬೆಂಗಳೂರು: ಅನರ್ಹರಾಗಿರುವ 17 ಶಾಸಕರ ಪೈಕಿ ಆರು ಕ್ಷೇತ್ರಗಳಲ್ಲಿ ಅತಿವೃಷ್ಟಿ ತೀವ್ರ ಸ್ವರೂಪ ಪಡೆದು ಕೊಂಡಿದ್ದು, ಅಲ್ಲಿನ ಜನರ ಸಮಸ್ಯೆ ಕೇಳಲು, ಪರಿಹಾರ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳಲು ಜನಪ್ರತಿನಿಧಿಗಳೇ ಇಲ್ಲದಂತಾಗಿದೆ.

ಸದಸ್ಯತ್ವದಿಂದ ಅನರ್ಹಗೊಂಡಿರುವುದರಿಂದ ಕ್ಷೇತ್ರಗಳಲ್ಲಿ ಅಧಿಕಾರಿಗಳ ಸಭೆ ನಡೆಸಲು, ಯಾವುದೇ ಸಲಹೆ, ಸೂಚನೆ ನೀಡಲು ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಶಾಸಕರಲ್ಲ ಎಂಬ ಕಾರಣಕ್ಕೆ, ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಮಳೆ ಅನಾಹುತದಿಂದ ತತ್ತರಿಸಿರುವ ಕ್ಷೇತ್ರಗಳ ಕಡೆ ಗಮನ ಹರಿಸಲು ಸಚಿವರಿಲ್ಲ, ಶಾಸಕರೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಜನರು ಪರಿಹಾರಕ್ಕಾಗಿ ಪರಿತಪಿಸುವುದು ಮಾತ್ರ ತಪ್ಪಿಲ್ಲ.

ಬೆಳಗಾವಿ ಜಿಲ್ಲೆಯಲ್ಲೇ ಅನರ್ಹರ ಮೂರು ಕ್ಷೇತ್ರಗಳು ಬರಲಿದ್ದು, ಇವು ತೀವ್ರ ಸ್ವರೂಪದ ನೆರೆಗೆ ತುತ್ತಾಗಿವೆ. ಕಾಗವಾಡ ಕ್ಷೇತ್ರದ ಶ್ರೀಮಂತ ಪಾಟೀಲ ಈವರೆಗೂ ಕ್ಷೇತ್ರಕ್ಕೆ ಕಾಲಿಟ್ಟಿಲ್ಲ. ಎಲ್ಲಿದ್ದಾರೆ ಎಂಬ ಮಾಹಿತಿಯೂ ಜನತೆಗೆ ಇಲ್ಲ ವಾಗಿದೆ. ಈ ಭಾಗದಲ್ಲಿ ಸಾಕಷ್ಟು ಮನೆಗಳು ನೀರಿನಲ್ಲಿ ಮುಳುಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ADVERTISEMENT

ಗೋಕಾಕ ಕ್ಷೇತ್ರದ ರಮೇಶ್ ಜಾರಕಿಹೊಳಿ ಎರಡು ದಿನಗಳ ಹಿಂದೆ ಕ್ಷೇತ್ರಕ್ಕೆ ಬಂದಿದ್ದು, ಕೆಲವೆಡೆ ನಿರಾಶ್ರಿತರನ್ನು ಭೇಟಿ ಮಾಡಿದ್ದಾರೆ. ಅಥಣಿ ಕ್ಷೇತ್ರದ ಮಹೇಶ್ ಕುಮಠಳ್ಳಿ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡುವಷ್ಟಕ್ಕೇ ಸೀಮಿತರಾಗಿದ್ದಾರೆ. ಈ ಎರಡೂ ಕ್ಷೇತ್ರ ಗಳಲ್ಲೂ ನೆರೆ ತೀವ್ರ ಸ್ವರೂಪ ಪಡೆದಿದೆ.

ಹಾವೇರಿ ಜಿಲ್ಲೆ ಹಿರೇಕೆರೂರ ಕ್ಷೇತ್ರದಲ್ಲಿ ಬಿ.ಸಿ.ಪಾಟೀಲ, ರಾಣೆಬೆನ್ನೂರು ಕ್ಷೇತ್ರದಲ್ಲಿ ಆರ್.ಶಂಕರ್ ವಾಸ್ತವ್ಯ ಹೂಡಿದ್ದಾರೆ. ಆದರೆ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಕ್ಷೇತ್ರದ ಶಿವರಾಮ್ ಹೆಬ್ಬಾರ ಕ್ಷೇತ್ರದಲ್ಲೇ ಇದ್ದು, ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.