ADVERTISEMENT

ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 19:07 IST
Last Updated 20 ಜೂನ್ 2021, 19:07 IST
   

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜೂ.21 ಹಾಗೂ 22ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಮುಂದುವರಿಸಲಾಗಿದೆ.ಉಳಿದ ಜಿಲ್ಲೆಗಳಲ್ಲಿ ಮಳೆ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು’ ಎಂದು ಮಾಹಿತಿ ನೀಡಿದೆ.

ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.7 ಮೀಟರ್‌ನಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು’ ಎಂದು ಇಲಾಖೆ ಎಚ್ಚರಿಸಿದೆ.

ADVERTISEMENT

ಮಳೆ–ಎಲ್ಲಿ,ಎಷ್ಟು?: ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 15 ಸೆಂ.ಮೀಗರಿಷ್ಠ ಮಳೆಯಾಗಿದೆ. ಕಾರ್ಕಳ 12, ಸಿದ್ದಾಪುರ 10, ಭಟ್ಕಳ, ಮೂಡಬಿದರೆ 9, ಕುಂದಾಪುರ 8, ಕಾರವಾರ 7, ಮಂಗಳೂರು 6, ಬೆಳ್ತಂಗಡಿ 5, ಸೊರಬ, ಕೊಪ್ಪ 4, ಪುತ್ತೂರು, ಬೆಳಗಾವಿ 3, ನಿಪ್ಪಾಣಿ, ಅಥಣಿ, ಧಾರವಾಡ 2, ಬೀದರ್, ಗದಗ, ಹಾವೇರಿ, ಹಾಸನ ಹಾಗೂ ಶಿಕಾರಿಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಯಚೂರು ಹಾಗೂ ಬೀದರ್‌ನಲ್ಲಿ ತಲಾ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.