ಬೆಂಗಳೂರು: ‘ಕಳೆದ ಮೂರು ವರ್ಷಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 479 ರಾಜಕಾಲುವೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ಬಿಬಿಎಂಪಿ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ.
ಈ ಕುರಿತಂತೆ ‘ಸಿಟಿಜನ್ ಆಕ್ಷನ್ ಗ್ರೂಪ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜಕಾಲುವೆ ಒತ್ತುವರಿ ತೆರವಿನ ಕುರಿತ ವಸ್ತುಸ್ಥಿತಿ ವರದಿಯನ್ನು ಬಿಬಿಎಂಪಿ ಮುಖ್ಯ ಎಂಜಿನಿಯರ್ (ರಾಜಕಾಲುವೆ ವಿಭಾಗ) ನ್ಯಾಯಪೀಠಕ್ಕೆ ಸಲ್ಲಿಸಿದರು.
ಪ್ರಮಾಣ ಪತ್ರದಲ್ಲಿ ಏನಿದೆ?: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 2,515 ಕಡೆ ರಾಜಕಾಲುವೆ ಒತ್ತುವರಿ ಆಗಿರುವುದನ್ನು ಗುರುತಿಸಲಾಗಿದೆ. ಇದರಲ್ಲಿ 2016ರಿಂದ 2019ರವರೆಗೆ ಒಟ್ಟು 479 ಒತ್ತುವರಿ ತೆರವು ಗೊಳಿಸಲಾಗಿದೆ ಎಂದು ವಿವರಿಸಲಾಗಿದೆ. 1,637 ಒತ್ತುವರಿಗಳ ಸರ್ವೆ ಕಾರ್ಯ ನಡೆಸಬೇಕಿದೆ. ಒಟ್ಟಾರೆ 450 ಒತ್ತುವರಿಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ. 399 ಒತ್ತುವರಿ ತೆರವುಗೊಳಿಸಲು ಗುರುತಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.