ADVERTISEMENT

ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷ: ಸುರಭಿ ದ್ವಿವೇದಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 21:51 IST
Last Updated 16 ಫೆಬ್ರುವರಿ 2021, 21:51 IST
   

ಬೆಂಗಳೂರು: ‘ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಸುರಭಿ ದ್ವಿವೇದಿ ಸ್ಪಷ್ಟಪಡಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಗಳ ಕುರಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಕ್ರೋಢೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಎರಡು ವಾರಗಳಿಂದ ಈ ಕುರಿತು ಉಂಟಾಗಿರುವ ಗೊಂದಲಗಳಿಗೆ ತೆರೆ ಎಳೆದರು.

‘ಪಕ್ಷದ ಆಂತರಿಕ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ. ಬ್ಲಾಕ್ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿ ಸೋತವರು ನಮ್ಮವರೇ, ಗೆದ್ದವರೂ ನಮ್ಮವರೇ. ಹಲವು ಪ್ರಮುಖ ಯುವ ನಾಯಕರು ಚುನಾವಣೆಯಲ್ಲಿ ಸೋತಿದ್ದಾರೆ. ಅವರಿಗೂ ಪಕ್ಷದ ವಿವಿಧ ಘಟಕಗಳಲ್ಲಿ ಅವಕಾಶ ಕಲ್ಪಿಸುತ್ತೇವೆ. ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು’ ಎಂದರು.

ADVERTISEMENT

ಅದಕ್ಕೂ ಮೊದಲು ಅವರು, ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಚುನಾವಣೆ ನಡೆದ ವಿಧಾನದ ಬಗ್ಗೆ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.