
ರಾಮಚಂದ್ರಗೌಡ ಅಧಿಕಾರ ಸ್ವೀಕಾರ
ಬೆಂಗಳೂರು: ಕೆ.ಆರ್. ಪುರದಲ್ಲಿ ಇರುವ ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಪತಿಯಾಗಿ ಎಂ. ರಾಮಚಂದ್ರಗೌಡ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.
ಅವರು ಈ ಹಿಂದೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾಗಿ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ವಿಚಾರಸಂಕಿರಣ ಜ. 30ರಿಂದ
ಬೆಂಗಳೂರು: ಸೇವಾ ಇನ್ ಆ್ಯಕ್ಷನ್ ಸಂಸ್ಥೆಯು ಜ. 30 ಹಾಗೂ 31ರಂದು ‘ಶಿಕ್ಷಣ ಮತ್ತು ಕೌಶಲ ಅಭಿವೃದ್ಧಿಗಾಗಿ ನೀತಿ ಬಳಕೆ–ಅಂಗವಿಕಲ ವ್ಯಕ್ತಿಗಳ ಹಕ್ಕುಗಳ (ಆರ್ಪಿಡಬ್ಲ್ಯೂಡಿ) ಅಧಿನಿಯಮ, 2016ರ ದಶಕ’ ಎಂಬ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನಲ್ಲಿ ನಡೆಯಲಿದೆ.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕಿ ಮಂಜುಳಾ ನಂಜುಂಡಯ್ಯ, ‘ಶಿಕ್ಷಣ, ಕೌಶಲ ಅಭಿವೃದ್ಧಿ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಆರ್ಪಿಡಬ್ಲ್ಯುಡಿ ಅಧಿನಿಯಮದ ಪರಿಣಾಮಕಾರಿ ಜಾರಿಗೆ ಬಲಪಡಿಸಲು ಈ ವಿಚಾರಸಂಕಿರಣ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ಕೇಂದ್ರ ಸಚಿವ ವೀರೇಂದ್ರ ಕುಮಾರ್, ಸಿಸಿಪಿಡಿ ಆಯುಕ್ತ ಗೋವಿಂದರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆರ್ಥಿಕ ಸಲಹೆಗಾರ್ತಿ ಎ. ಶ್ರೀಜಾ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕ ಅಶೋಕ್ ಡಿ.ಆರ್., ಅಂಗವಿಕಲರ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಭಾಗವಹಿಸಲಿದ್ದಾರೆ’ ಎಂದರು.
ವಾಣಿವಿಲಾಸ ಆಸ್ಪತ್ರೆ: ಸ್ತ್ರೀರೋಗ ತಜ್ಞರ ನೇಮಕ
ಬೆಂಗಳೂರು: ಇಲ್ಲಿನ ವಾಣಿವಿಲಾಸ ಆಸ್ಪತ್ರೆಗೆ ಆರು ಮಂದಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರನ್ನು ನೇಮಿಸಿಕೊಳ್ಳಲು ಅನುಮೋದನೆ ನೀಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ವಾಣಿವಿಲಾಸ ಆಸ್ಪತ್ರೆಯಿಂದ ನಾಲ್ವರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರನ್ನು ಘೋಷಾ ಆಸ್ಪತ್ರೆಗೆ ನಿಯೋಜಿಸಲಾಗಿತ್ತು. ಇದರಿಂದಾಗಿ ವಾಣಿವಿಲಾಸ ಆಸ್ಪತ್ರೆಗೆ ವೈದ್ಯರ ಕೊರತೆ ಎದುರಾಗಿತ್ತು. ಆದ್ದರಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
ವಾಣಿವಿಲಾಸ ಆಸ್ಪತ್ರೆಗೆ ಪ್ರತಿನಿತ್ಯ ಸುಮಾರು 400 ಹೊರರೋಗಿಗಳು ಭೇಟಿ ನೀಡುತ್ತಾರೆ. ಸರಾಸರಿ 120 ಒಳರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. ಶಿಫಾರಸು ಆಧಾರದಲ್ಲಿ ಹೆಚ್ಚಿನವರು ಬರುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.