ಬೆಂಗಳೂರು: ‘₹ 13,572 ಕೋಟಿ ಸಾಲವನ್ನು ಬಿಬಿಎಂಪಿ ಮೇಲೆ ಹೊರಿಸಿ ಹೋಗಿರುವ ಬಿಜೆಪಿಯವರೇ ಪಾಲಿಕೆಯ ದುಸ್ಥಿತಿಗೆ ಕಾರಣ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ಕುರಿತು ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ಅವರು ಮಾಡಿದ್ದ ಸಾಲವನ್ನು ನಾವು ತೀರಿಸಿದ್ದೇವೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಂಗಳೂರಿನ ಹೆಸರಿಗೆ ಕಪ್ಪು ಚುಕ್ಕೆ ಬಂದಿತ್ತು’ ಎಂದರು.
ಬಿಜೆಪಿ ಆಡಳಿತ ನಡೆಸುತ್ತಿದ್ದಾಗ ಬೆಂಗಳೂರಿನಲ್ಲಿ ಮಳೆ ಸುರಿದರೆ ಬಡಾವಣೆಗಳೆಲ್ಲ ಕೆರೆಗಳಂತಾಗುತ್ತಿದ್ದವು. ಬಿಬಿಎಂಪಿ ಚುನಾವಣೆಯನ್ನೂ ಮುಂದಕ್ಕೆ ಹಾಕುತ್ತಾ ಬಂದರು. ಈಗ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
‘ಬೆಂಗಳೂರಿನಲ್ಲಿ ಬಹಳ ಮಂದಿ ಬಿಜೆಪಿ ನಾಯಕರಿದ್ದಾರೆ. ಆರ್. ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಉಪ ಮುಖ್ಯಮಂತ್ರಿಯಾಗಿದ್ದ ಅಶ್ವತ್ಥನಾರಾಯಣ ಅವರೂ ಇದ್ದಾರೆ’ ಎಂದರು.
ಇದೇ ವಿಷಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಬ್ರ್ಯಾಂಡ್ ಬೆಂಗಳೂರು ಆಗಿಲ್ಲ ಎಂದು ಪ್ರತಿಭಟನೆ ನಡೆಸಲು ಬಿಜೆಪಿಯವರು ಹೊರಟಿದ್ದಾರೆ. ಎರಡು ತಿಂಗಳಿನಿಂದ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದೆ. ಅದು ತಿಳಿದಿಲ್ಲವೆ’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.