ADVERTISEMENT

ಪರಪ್ಪನ ಅಗ್ರಹಾರ ಜೈಲಿಗೆ ಪಾತಕಿ ರವಿ ಪೂಜಾರಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2020, 19:37 IST
Last Updated 6 ಮಾರ್ಚ್ 2020, 19:37 IST
ರವಿ ಪೂಜಾರಿ
ರವಿ ಪೂಜಾರಿ   

ಬೆಂಗಳೂರು: ಸೆನೆಗಲ್‌ನಲ್ಲಿ ಬಂಧಿಸಿ ನಗರಕ್ಕೆ ಕರೆತರಲಾಗಿರುವ ಭೂಗತ ಪಾತಕಿ ರವಿ ಪೂಜಾರಿಗೆ ಶುಕ್ರವಾರದಿಂದ (ಮಾರ್ಚ್‌ 6) 14 ದಿನಗಳ ಅವಧಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ತಿಲಕ್‌ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಜೋಡಿ ಕೊಲೆ ಸಂಬಂಧ ರವಿ ಪೂಜಾರಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು, ಆತನನ್ನು ಶುಕ್ರವಾರ ನಗರದ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು, ಪೂಜಾರಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ನಂತರ ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.

ADVERTISEMENT

‘ಬೆಂಗಳೂರಿನ ಶಬನಂ ಡೆವಲಪರ್ಸ್‌ನ ಉದ್ಯೋಗಿಗಳಾದ ಶೈಲಜಾ ಹಾಗೂ ರವಿ ಅವರ ಮೇಲೆ 2007ರಲ್ಲಿ ಮುಸುಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರು. ಇಬ್ಬರೂ ಮೃತಪಟ್ಟಿದ್ದರು. ‘ರವಿ ಪೂಜಾರಿ’ ಎಂಬ ಭಿತ್ತಿಪತ್ರವನ್ನು ಕಚೇರಿ ಗೋಡೆ ಮೇಲೆ ಅಂಟಿಸಿ ಆರೋಪಿಗಳು ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಪೂಜಾರಿ ಭಾಗಿಯಾಗಿದ್ದ ಮಾಹಿತಿ ಇತ್ತು. ಹೀಗಾಗಿ ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಯಿತು’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘ಕೃತ್ಯ ಎಸಗಿದ್ದ ಸಹಚರರು ಹಾಗೂ ಬಳಸಿದ್ದ ಶಸ್ತ್ರಾಸ್ತ್ರಗಳ ಬಗ್ಗೆ ಪೂಜಾರಿಯಿಂದ ಮಾಹಿತಿ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ ಇದ್ದು, ಪರಿಶೀಲಿಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.