ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ಗುರುವಾರ ಆಯೋಜಿಸಿದ್ದ ಶ್ರೀ ಶ್ರೀ ರವಿಶಂಕರ್ ಅವರ ಉಪನ್ಯಾಸ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದ್ದು, ಕಾರ್ಯಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಂಸ್ಥೆಯ ವಿದ್ಯಾರ್ಥಿಗಳು ಸಹಿ ಸಂಗ್ರಹ ಅಭಿಯಾನ ನಡೆಸಿದ್ದಾರೆ.
ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ‘ಆಂತರಿಕ ಶಾಂತಿಯ ಶ್ರೇಷ್ಠತೆ’ ವಿಷಯ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀ ಶ್ರೀ ರವಿಶಂಕರ್ ಉಪನ್ಯಾಸ ನೀಡಿದ್ದರು. 950 ವಿದ್ಯಾರ್ಥಿಗಳು ಹಾಗೂ 50 ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ‘ಈ ಉಪನ್ಯಾಸ ಕಾರ್ಯಕ್ರಮ ವಿಜ್ಞಾನಕ್ಕೆ ವಿರುದ್ಧವಾಗಿದ್ದು, ಅವೈಜ್ಞಾನಿಕ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ’ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
‘ಜೆ.ಎನ್. ಟಾಟಾ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆದಿದೆ. ಶ್ರೀ ಶ್ರೀ ರವಿಶಂಕರ್ ಅವರಿಗೆ ಮಾತನಾಡುವ ಸ್ವಾತಂತ್ರ್ಯವಿದ್ದು, ಅದಕ್ಕೆ ನಾವು ಅಡ್ಡಿಪಡಿಸಿಲ್ಲ. ಬದಲಿಗೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿಗಳ ಸಹಿ ಸಂಗ್ರಹಿಸಿ ತಮಗೆ ಮನವಿ ಸಲ್ಲಿಸಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ’ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಆಕ್ಷೇಪದ ಬಗ್ಗೆ ತಮ್ಮ ವೆಬ್ಸೈಟ್ನಲ್ಲಿ ಬರೆದುಕೊಂಡಿರುವ ರವಿಶಂಕರ್, ‘ಕೆಲ ವಿದ್ಯಾರ್ಥಿಗಳು ನನ್ನ ಉಪನ್ಯಾಸಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಗೊತ್ತಾಯಿತು. ಆದರೆ, ಅವರಿಗೆ ನನ್ನ ಬಗ್ಗೆ ಗೊತ್ತಿಲ್ಲ. ಯಾರನ್ನೇ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಅವರ ಬಗ್ಗೆ ತಿಳಿದುಕೊಂಡು ಮಾತನಾಡುವುದು ಸೂಕ್ತ’ ಎಂದು ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.