ಬೆಂಗಳೂರು: ನಗರ ಪಾಲಿಕೆ ಮಟ್ಟದಲ್ಲಿ ಇ-ಆಫೀಸ್ ಮೂಲಕವೇ ಕಡತ ವಿಲೇವಾರಿಗೆ ಕ್ರಮವಹಿಸಬೇಕು. ಕಾಗದ ಸ್ವರೂಪದ ದಾಖಲೆಗಳನ್ನು ಕ್ರಮೇಣ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಹೇಳಿದರು.
ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಅಭಿವೃದ್ಧಿ ಕಾಮಗಾರಿಗಳು ಎರಡು ಅಥವಾ ಹೆಚ್ಚು ನಗರ ಪಾಲಿಕೆಗಳ ವ್ಯಾಪ್ತಿಯನ್ನು ಒಳಗೊಂಡಿದ್ದರೆ, ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾಲಮಿತಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ನಗರ ಪಾಲಿಕೆ ಕಚೇರಿಗಳು ಹಾಗೂ ಉಪವಿಭಾಗಗಳಲ್ಲಿ ಮಾನವ ಸಂಪನ್ಮೂಲದ ಕೊರತೆ ಇರುವ ಸ್ಥಳಗಳನ್ನು ಗುರುತಿಸಿ, ಅಗತ್ಯ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವ ಸಲ್ಲಿಸಲು ನಿರ್ದೇಶನ ನೀಡಿದರು.
ಆಯಾ ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತ ಮಾಹಿತಿ ಪಡೆಯಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ಆ ನೋಡಲ್ ಅಧಿಕಾರಿ ಜಿಬಿಎ ಸಮನ್ವಯ ವಿಭಾಗದ ಜೊತೆ ಕಾಮಗಾರಿಗಳ ಕುರಿತು ಕಾಲ-ಕಾಲಕ್ಕೆ ಮಾಹಿತಿ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ ಕೆ.ಎನ್. ರಮೇಶ್, ವಿಶೇಷ ಆಯುಕ್ತ ಕೆ. ಹರೀಶ್ ಕುಮಾರ್, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ಜಂಟಿ ಆಯುಕ್ತ ಮಧು ಪಾಟೀಲ್, ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ, ರಾಜೇಶ್, ರವಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.