ADVERTISEMENT

ನೌಕರರಿಗೆ ಶೀಘ್ರ ವೇತನ ಬಿಡುಗಡೆ ಮಾಡಿ

ಕಚೇರಿಗೆ ಬರಲು ಸಾರಿಗೆ ವ್ಯವಸ್ಥೆ ಕಲ್ಪಿಸಿ: ಬಿಬಿಎಂಪಿ ವಿರೋಧ ಪಕ್ಷ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 12:40 IST
Last Updated 2 ಏಪ್ರಿಲ್ 2020, 12:40 IST

ಬೆಂಗಳೂರು: ಬಿಬಿಎಂಪಿಯ ಅಧಿಕಾರಿಗಳು ಹಾಗೂ ನೌಕರರಿಗೆ ತ್ವರಿತವಾಗಿ ವೇತನ ಮಂಜೂರು ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಒತ್ತಾಯಿಸಿದ್ದಾರೆ.

ಈ ಕುರಿತು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಅವರಿಗೆ ಗುರುವಾರ ಪತ್ರ ಬರೆದಿರುವ ಅವರು, ‘ಎಲ್ಲೆಡೆ
ತುರ್ತು ಪರಿಸ್ಥಿತಿ ಇರುವ ಕಾರಣ ಪಾಲಿಕೆ ನೌಕರರು ಹಾಗೂ ಅಧಿಕಾರಿಗಳು ದೈನಂದಿನ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ಅವರ ವೇತನದಲ್ಲಿ ಯಾವುದೇ ಕಟಾವು ಮಾಡದೇ ತ್ವರಿತವಾಗಿ ಬಿಡುಗಡೆ ಮಾಡಬೇಕಾದ ಅನಿವಾರ್ಯ ಇದೆ’ ಎಂದು ಗಮನ ಸೆಳೆದಿದ್ದಾರೆ.

'ನಗರದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ನಮ್ಮ ಮೆಟ್ರೊ, ರೈಲು, ಆಟೊ ರಿಕ್ಷಾ ಸೇರಿದಂತೆ ಸಕಲ ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡಿದ್ದರೂ ಪಾಲಿಕೆ ನೌಕರರು ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ. 10 ಕಿ.ಮೀಟರ್‌ಗಳಿಂದಲೂ ಹೆಚ್ಚು ದೂರದಿಂದ ಕಚೇರಿಗೆ ಬರುತ್ತಿರುವ ನೌಕರರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಅನಿವಾರ್ಯ ಪರಿಸ್ಥಿತಿಯಿಂದ ಕಚೇರಿಗೆ ಹಾಜರಾಗಲು ಸಾಧ್ಯವಾಗದ ಅಧಿಕಾರಿ ಅಥವಾ ನೌಕರರ ವಿರುದ್ಧ ನೋಟಿಸ್‌ ಜಾರಿ, ವೇತನ ಕಡಿತ ಹಾಗೂ ಅಮಾನತು ಮೊದಲಾದ ಶಿಸ್ತುಕ್ರಮಗಳನ್ನು ಕೈಗೊಳ್ಳುವುದನ್ನು ಬಿಟ್ಟು, ಮೊದಲು ಅವರು ಕಚೇರಿಗೆ ಬರಲು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.