ಬೆಂಗಳೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಾಲಿವುಡ್ ಗಾಯಕ ಸೋನು ನಿಗಮ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
‘ನಗರದ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಏಪ್ರಿಲ್ 25 ಮತ್ತು 26 ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರಿಂದಾಗಿಯೇ ಭಯೋತ್ಪಾದಕ ದಾಳಿ ನಡೆಯುತ್ತಿವೆ ಎಂದು ಸೋನು ನಿಗಮ್ ಹೇಳಿದ್ದಾರೆ. ಕನ್ನಡದಲ್ಲಿ ಹಾಡುವಂತೆ ಕೇಳಿದ ವಿದ್ಯಾರ್ಥಿಗಳ ಮೇಲೆ ಹರಿಹಾಯ್ದ ಅವರನ್ನು ಬಂಧಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, ‘ಕನ್ನಡಿಗರನ್ನು ಕೀಳಾಗಿ ನಿಂದಿಸಿರುವ ಸೋನು ಅವರು ಮತ್ತೆ ವಿಡಿಯೊ ಹರಿಬಿಟ್ಟಿದ್ದಾರೆ. ಘಟನೆ ಬಗ್ಗೆ ಕ್ಷಮೆ ಕೇಳದೆ, ಅದನ್ನು ಸಮರ್ಥಿಸಿಕೊಂಡಿದ್ದಾರೆ. ಉತ್ತರ ಭಾರತೀಯರು ಅವರನ್ನು ನಿರ್ಲಕ್ಷ್ಯ ಮಾಡಿದಾಗ, ಕನ್ನಡಿಗರು ಕರೆದು ಅವಕಾಶ ನೀಡಿದ್ದನ್ನು ಮರೆತಿದ್ದಾರೆ. ಗಾಯಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಈ ಸಂಬಂಧ ವೇದಿಕೆ ಕಾರ್ಯಕರ್ತರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.