ಬೆಂಗಳೂರು: ‘ರಾಜ್ಯದ ಖಾಸಗಿ ಕಂಪನಿಗಳಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಸರ್ಕಾರವು ಕೂಡಲೇ ಜಾರಿಗೊಳಿಸಬೇಕು’ ಎಂದು ಸಾಹಿತಿಗಳು ಹಾಗೂ ಕನ್ನಡ ಪರ ಹೋರಾಟಗಾರರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ಪತ್ರ ಬರೆದಿದ್ದು, ಮಸೂದೆ ಜಾರಿ ಮಾಡುವಂತೆ ಸಾಹಿತಿ ಹಂ.ಪ. ನಾಗರಾಜಯ್ಯ, ಕವಿ ಎಲ್. ಹನುಮಂತಯ್ಯ, ಲೇಖಕಿ ಬಿ.ಟಿ. ಲಲಿತಾನಾಯಕ್, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್, ಕನ್ನಡ ಪರ ಹೋರಾಟಗಾರರಾದ ರಾ.ನಂ. ಚಂದ್ರಶೇಖರ, ವ.ಚ. ಚನ್ನೇಗೌಡ, ಸ.ರ. ಸುದರ್ಶನ ಹಾಗೂ ಅಶ್ವತ್ಥನಾರಾಣ ಅವರು ಆಗ್ರಹಿಸಿದ್ದಾರೆ.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಒದಗಿಸುವುದರ ಜೊತೆಗೆ ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಸ್ವಾಮ್ಯದ ಮತ್ತು ಖಾಸಗಿ ಉದ್ದಿಮೆ, ಬ್ಯಾಂಕ್ಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ನ್ಯಾಯಯುತ ಪಾಲು ಒದಗಿಸಬೇಕು. ಕನ್ನಡಿಗರ ಉದ್ಯೋಗ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವಂತಾಗಲು ‘ಸರೋಜಿನಿ ಮಹಿಷಿ ಪರಿಷ್ಕೃತ ವರದಿಯ ಶಿಫಾರಸು’ಗಳನ್ನು ಸದನದಲ್ಲಿ ಮಂಡಿಸಿ, ಕಾನೂನು ಬಲ ತಂದುಕೊಡ ಬೇಕು’ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
‘ಖಾಸಗಿ ಕಂಪನಿಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ 50 ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ 75 ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ಸರ್ಕಾರದ ನಡೆ ಸ್ವಾಗತಾರ್ಹ. ಆದರೆ, ಸರ್ಕಾರದ ಈ ನಿರ್ಧಾರದ ಬಗ್ಗೆ ಕೆಲವು ಉದ್ಯಮಿಗಳು ಅಪಸ್ವರ ಎತ್ತಿರುವುದು ದುರದೃಷ್ಟಕರ. ಉದ್ಯಮಿಗಳ ಮಾತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ’ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.