ಬೆಂಗಳೂರು: ‘ರಾಜ್ಯದ ಎಲ್ಲ ವೈದ್ಯಕಿಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಬೇಕು’ ಎಂದು ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿಯ ಸದಸ್ಯರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ಇಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ರಾಜ್ಯದಲ್ಲಿ ಅಂಗಾಂಗ ದಾನ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಿದರು. ‘ವಿವಿಧ ಕಾರಣಗಳಿಂದಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಮಿದುಳು ನಿಷ್ಕ್ರಿಯಗೊಂಡಿದ್ದಲ್ಲಿ, ತಕ್ಷಣ ವೈದ್ಯರು ವ್ಯಕ್ತಿಯ ಕುಟುಂಬಕ್ಕೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಬೇಕು. ಅಂಗಾಂಗ ದಾನ ಪ್ರಕ್ರಿಯೆ ನಡೆಸಿ, ರೋಗಿಗಳಿಗೆ ಅಂಗಾಂಗ ಒದಗಿಸುವಂತಾಗಬೇಕು. ಈ ಬಗ್ಗೆ ಪ್ರೇರೇಪಿಸಲು ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಸದಸ್ಯರು ಮನವಿ ಮಾಡಿದರು.
‘ಮೂತ್ರಪಿಂಡ, ಯಕೃತ್ತು ವೈಫಲ್ಯದಿಂದ ಬಳಲುತ್ತಿರುವ ಕಲ್ಯಾಣ ಕರ್ನಾಟಕ ಭಾಗದ ರೋಗಿಗಳಿಗೆ ದುಬಾರಿ ಅಂಗಾಂಗ ಕಸಿ ಕೈಗೆಟುಕದಂತಾಗಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕಲಬುರಗಿ ವಿಭಾಗದಲ್ಲಿ ಉಚಿತ ಮೂತ್ರಪಿಂಡ ಮತ್ತು ಯಕೃತ್ತು ಕಸಿ ಕೇಂದ್ರ ಪ್ರಾರಂಭಿಸಬೇಕು’ ಎಂದು ಆಗ್ರಹಿಸಿದರು.
‘ನೆಫ್ರೋ ಯುರಾಲಜಿ ಮತ್ತು ಗ್ಯಾಸ್ಟ್ರೋ ಎಂಟರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್ಪ್ಲಾಂಟ್ ಸಂಸ್ಥೆಯ (ಐಗಾಟ್) ಕೇಂದ್ರವನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕು’ ಎಂದು ಮನವಿ ಮಾಡಿದರು.
ಸಮಿತಿಯ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ದಿನೇಶ್ ಗುಂಡೂರಾವ್, ‘ಅಂಗಾಂಗ ದಾನ ಹೆಚ್ಚಿಸುವ ನಿಟ್ಟಿನಲ್ಲಿ ಈಗಾಗಲೇ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು. ರಾಜ್ಯದಲ್ಲಿ ಅಂಗಾಂಗ ದಾನ ಹೆಚ್ಚಳಕ್ಕೆ ಅಗತ್ಯ ಕ್ರಮ ವಹಿಸುವಂತೆ ಇದೇ ಸಂದರ್ಭದಲ್ಲಿಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.