ADVERTISEMENT

ಮೀಸಲಾತಿ ಹೆಚ್ಚಳ: 9ನೇ ಪರಿಚ್ಛೇದಕ್ಕೆ ಸೇರಿಸಲು ಉಗ್ರಪ್ಪ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 14:10 IST
Last Updated 6 ಡಿಸೆಂಬರ್ 2025, 14:10 IST
ವಿ.ಎಸ್.ಉಗ್ರಪ್ಪ
ವಿ.ಎಸ್.ಉಗ್ರಪ್ಪ   

ಬೆಂಗಳೂರು: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇಕಡ 56ರಷ್ಟು ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು’ ಎಂದು ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಹೆಚ್ಚಿಸುವ ಕಾಯ್ದೆ ರೂಪಿಸಲಾಗಿತ್ತು. ಆದರೆ, ಅದನ್ನು ಅನುಷ್ಠಾನ ಮಾಡದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರೊಂದಿಗೆ ಚೆಲ್ಲಾಟ ಆಡಲಾಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಈ ಬಗ್ಗೆ ಚರ್ಚಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ’ ಎಂದರು.

‘ತಮಿಳುನಾಡಿನಲ್ಲಿ ಮೀಸಲಾತಿ ಪ್ರಮಾಣವನ್ನು ಶೇ 69ಕ್ಕೆ ಹೆಚ್ಚಿಸಿದ್ದನ್ನು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸಲಾಗಿದೆ. ಈ ಮೂಲಕ ಕಾಯ್ದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಯಾರೂ ಪ್ರಶ್ನಿಸದಂತೆ ಮಾಡಲಾಗಿದೆ. ಇದು ಎಲ್ಲ ರಾಜ್ಯಗಳಿಗೂ ಮಾದರಿ. ರಾಜ್ಯದ ಕಾಂಗ್ರೆಸ್‌ ಸರ್ಕಾರವೂ ಈ ಪ್ರಯತ್ನ ಮಾಡಬೇಕು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿತ್ತು. ಈಗ ಅವರು, ಗೋವಿಂದ ಕಾರಜೋಳ ಹಾಗೂ ಜಗದೀಶ ಶೆಟ್ಟರ್ ಅವರು ಸಂಸದರಾಗಿದ್ದಾರೆ. ಈ ವಿಚಾರದಲ್ಲಿ ಎಲ್ಲ ಪಕ್ಷಗಳು ಬೆಂಬಲಿಸಬೇಕು’ ಎಂದು ಹೇಳಿದರು.

ADVERTISEMENT

‘ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದ್ದರೂ ಅನುಷ್ಠಾನಗೊಂಡಿಲ್ಲ. ಇದರಿಂದ ಸಾಮಾಜಿಕ ನ್ಯಾಯಕ್ಕೆ ಪೆಟ್ಟು ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ಸ್ಪಷ್ಟ ಕಾನೂನು ರೂಪಿಸಬೇಕು’ ಎಂದು ಆಗ್ರಹಿಸಿದರು. 

‘ಪರಿಶಿಷ್ಟ ಪಂಗಡಕ್ಕೆ ಯಾರನ್ನಾದರೂ ಸೇರಿಸಿ’

ಪರಿಶಿಷ್ಟ ಪಂಗಡಕ್ಕೆ(ಎಸ್‌ಟಿ) ಕುರುಬರು ಸೇರಿದಂತೆ ಬೇರೆ ಯಾವ ಜಾತಿಯವನ್ನಾದರೂ ಸೇರಿಸಬಹುದು. ಆದರೆ ಆ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ನಂತರ ಅದನ್ನು ಪರಿಶೀಲಿಸಬೇಕು. ಇದರ ಜೊತೆಗೆ ಆ ಸಮುದಾಯಗಳಿಗೆ ಈಗಿರುವ ಮೀಸಲಾತಿಯ ಪ್ರಮಾಣದ ಜೊತೆಗೆ ‍ಎಸ್‌ಟಿಗೆ ಸೇರಬಹುದು’ ಎಂದು ವಿ.ಎಸ್. ಉಗ್ರಪ್ಪ ಹೇಳಿದರು. 

‘ಕುರುಬರನ್ನು ಎಸ್‌ಟಿಗೆ ಸೇರಿಸಲು ಸಿದ್ದರಾಮಯ್ಯ ಶಿಫಾರಸು ಮಾಡಿಲ್ಲ. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಆಗಿದ್ದಾಗಲೇ ಕುರುಬರನ್ನು ಹಾಗೂ ವಾಲ್ಮೀಕಿ ಸಮುದಾಯಗಳನ್ನು ಎಸ್‌ಟಿಗೆ ಸೇರಿಸಲು ಶಿಫಾರಸು ಮಾಡಲಾಗಿತ್ತು. ಇದರಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿ ನಾಯಕರಿಗೆ ಮಾತ್ರ ಸಿಕ್ಕಿತ್ತು. ಹಿಂದಿನ ಬಿಜೆಪಿ ಸರ್ಕಾರ ಇದನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.