ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಸರಕು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ತಪ್ಪಿಸಿಕೊಳ್ಳಲು ಸರಕು ಸಾಗಣೆ ವಾಹನಗಳಾದ ಟಿಪ್ಪರ್ ಲಾರಿ, ಟೆಂಪೊ, ಸರಕು ಆಟೊಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಸಂಚರಿಸುತ್ತಿದ್ದವು. ಇದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಸಮಸ್ಯೆ ಹೆಚ್ಚಾಗಿತ್ತು. ಅಪಘಾತ ಕೂಡ ಸಂಭವಿಸುತ್ತಿತ್ತು. ಜ್ಞಾನಭಾರತಿ ಆವರಣದಲ್ಲಿ ಸರಕು ಸಾಗಣೆ ವಾಹನ ಸಂಚಾರವನ್ನು ನಿರ್ಬಂಧಿಸುವಂತೆ ವಿ.ವಿ ಆಡಳಿತ ಮಂಡಳಿಯವರು ಕೋರಿದ್ದರು.
ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ವಿಶ್ವವಿದ್ಯಾಲಯದ ಆವರಣದಲ್ಲಿ ಸರಕು ಸಾಗಣೆ ವಾಹನ ಪ್ರವೇಶಿಸಿದಂತೆ ನಿರ್ಬಂಧಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಆದೇಶಿಸಿದ್ದಾರೆ.
ಉಲ್ಲಾಳ, ಮರಿಯಪ್ಪನಪಾಳ್ಯ, ನಾಗರಬಾವಿ ಸರ್ಕಲ್ , ಜ್ಞಾನಭಾರತಿ ಕಡೆಯಿಂದ ಯಾವುದೇ ಸರಕು ವಾಹನಗಳು ವಿಶ್ವವಿದ್ಯಾಲಯ ಪ್ರವೇಶಿದಂತೆ ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಕಡ್ಡಾಯಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.