ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ299 ಕಿ.ಮೀ ವೇಗದಲ್ಲಿ ಬೈಕ್ ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಕುತ್ತು ತರಲು ಯತ್ನಿಸಿದ ಆರೋಪದಡಿ ಸವಾರ ಮುನಿಯಪ್ಪ ಎಂಬುವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಐಷಾರಾಮಿ ಬೈಕ್ನಲ್ಲಿ ಇತ್ತೀಚೆಗೆ ಹೊಸೂರು ರಸ್ತೆಗೆ ಬಂದಿದ್ದ ಮುನಿಯಪ್ಪ, ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ299 ಕಿ.ಮೀ (ಗಂಟೆಗೆ) ವೇಗದಲ್ಲಿ ಬೈಕ್ ಚಲಾಯಿಸಿದ್ದರು. ಇದರ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ವಿಡಿಯೊ ಗಮನಿಸಿದ್ದ ಸಿಸಿಬಿ ಪೊಲೀಸರು, ಸ್ವಯಂಪ್ರೇರಿತವಾಗಿ ತನಿಖೆ ಕೈಗೊಂಡು ಸವಾರ ಮುನಿಯಪ್ಪ ಅವರನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಬೈಕ್ ಸಹ ಜಪ್ತಿ ಮಾಡಿದ್ದಾರೆ. ನಂತರ ಆರೋಪಿಯನ್ನು ಸಂಚಾರ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ.
‘ಲಾಕ್ಡೌನ್ ಸಂದರ್ಭದಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಸಾಗಣೆ ವಾಹನಗಳು ಮಾತ್ರ ಸಂಚರಿಸುತ್ತಿವೆ. ಇಂಥ ವೇಳೆಯಲ್ಲಿ ಮುನಿಯಪ್ಪ, ಅಪಾಯಕಾರಿ ರೀತಿಯಲ್ಲಿ ಬೈಕ್ ಚಲಾಯಿಸಿದ್ದರು’ ಎಂದು ಸಿಸಿಬಿಯ ಅಧಿಕಾರಿಯೊಬ್ಬರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.