ಬೆಂಗಳೂರು: ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಮಾರ್ಚ್ 8ಕ್ಕೆ 493 ಮತ್ತು ಮಾರ್ಚ್ 15ಕ್ಕೆ 604 ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಕೋವಿಡ್ ದೃಢ ಪ್ರಮಾಣ ಶೇ 0.61 ಇದ್ದರೆ, ರಾಜ್ಯದಲ್ಲಿ ಶೇ 2.77ರಷ್ಟಿದೆ. ಪ್ರಮುಖವಾಗಿ ಶಿವಮೊಗ್ಗ, ಕಲಬುರಗಿ, ಮೈಸೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚು ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ವಿವರಿಸಿದ್ದಾರೆ.
ಹೀಗಾಗಿ, ಕೇಂದ್ರ ಸರ್ಕಾರದ ಸೂಚನೆಯಂತೆ ಪರೀಕ್ಷೆ ಕೈಗೊಳ್ಳುವುದು, ಸಂಪರ್ಕಿತರನ್ನು ಪತ್ತೆ ಮಾಡುವುದು ಹಾಗೂ ಚಿಕಿತ್ಸೆ ಮತ್ತು ಲಸಿಕೆ ನೀಡುವುದನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕೋವಿಡ್–19 ಹೊಸ ಪ್ರಕರಣಗಳು ದೃಢಪಡುತ್ತಿರುವ ಹೊಸ ಕ್ಲಸ್ಟರ್ಗಳ ಬಗ್ಗೆ ಹಾಗೂ ತೀವ್ರ ಉಸಿರಾಟದ ಸಮಸ್ಯೆ ಮತ್ತು ಶೀತ ಜ್ವರ ಮಾದರಿಯ ಅನಾರೋಗ್ಯದಿಂದ (ಐಎಲ್ಐ) ಬಳಲುತ್ತಿರುವ ರೋಗಿಗಳ ಬಗ್ಗೆ ನಿಯಮಿತವಾಗಿ ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಳ್ಳಬೇಕು ಮತ್ತು ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಇರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.