ಜಕ್ಕೂರಿನಲ್ಲಿ ಆಯೋಜಿಸಿದ್ದ ಬ್ಯಾಟರಾಯನಪುರ ವ್ಯವಸಾಯ ಸೇವಾ ಸಹಕಾರಿ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ಸಭೆಯನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಿದರು.
ಯಲಹಂಕ: ‘ರಾಜ್ಯದ ರೈತರ ಹಿತ ಕಾಪಾಡುವಲ್ಲಿ ಸಹಕಾರಿ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ಸೇವೆಯನ್ನು ಇನ್ನಷ್ಟು ವಿಸ್ತರಿಸುವ ಮೂಲಕ ರೈತರು ಹಾಗೂ ಬಡಜನರ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಜಕ್ಕೂರಿನಲ್ಲಿ ಆಯೋಜಿಸಿದ್ದ ಬ್ಯಾಟರಾಯನಪುರ ವ್ಯವಸಾಯ ಸೇವಾ ಸಹಕಾರಿ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸಂಘಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಜತೆಗೆ ರೈತರು ಕೃಷಿ ಚಟುವಟಿಕೆ ನಡೆಸಲು ಹಾಗೂ ಬಡಜನರಿಗೆ ಸಾಲಸೌಲಭ್ಯ ಒದಗಿಸಿ ಅನುಕೂಲ ಮಾಡಿಕೊಡಬೇಕು’ ಎಂದರು.
‘ಸುದೀರ್ಘವಾದ ಇತಿಹಾಸವಿರುವ ಸಂಘವು ಈ ಭಾಗದಲ್ಲಿ ವ್ಯವಸಾಯ ಚಟುವಟಿಕೆಗಳು ಇದ್ದಾಗ ಆರಂಭವಾಗಿತ್ತು. ಇತ್ತೀಚೆಗೆ ಕಡಿಮೆಯಾಗಿದ್ದರೂ ಸಹ ಬದಲಾದ ಪರಿಸ್ಥಿತಿಯ ನಡುವೆಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಈ ಭಾಗದ ಜನರ ಸೇವೆಯನ್ನು ಮಾಡಿಕೊಂಡು ಬರುತ್ತಿದೆ. ₹6 ಕೋಟಿ ಠೇವಣಿ ಹೊಂದಿದ್ದು, ₹5.11 ಕೋಟಿ ಸಾಲ ನೀಡಿ, ₹23 ಲಕ್ಷ ಲಾಭದೊಂದಿಗೆ ಪ್ರಗತಿಯ ಹಾದಿಯಲ್ಲಿದೆ’ ಎಂದು ಶ್ಲಾಘಿಸಿದರು.
ಮನವಿ: ಸಂಘದ ಕಾರ್ಯಚಟುವಟಿಕೆಗಳಿಗಾಗಿ ಜಕ್ಕೂರಿನಲ್ಲಿ ಗುರುತಿಸಿರುವ 10 ಗುಂಟೆ ಭೂಮಿಯನ್ನು ಮಂಜೂರು ಮಾಡಿಸಿಕೊಡಬೇಕು ಎಂದು ಸಂಘದ ಪದಾಧಿಕಾರಿಗಳು ಸಚಿವ ಕೃಷ್ಣಬೈರೇಗೌಡರಿಗೆ ಮನವಿಪತ್ರ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.