ADVERTISEMENT

ಬೆಂಗಳೂರು: ಸರ್ವೀಸ್‌ ಅಪಾರ್ಟ್‌ಮೆಂಟ್‌ನಲ್ಲಿ ರೌಡಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 16:03 IST
Last Updated 27 ಮಾರ್ಚ್ 2024, 16:03 IST
   

ಬೆಂಗಳೂರು: ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ದಿನೇಶ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

‘ರೌಡಿ ದಿನೇಶ್, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕಮ್ಮನಹಳ್ಳಿ ಬಳಿಯ ಸರ್ವೀಸ್ ಅಪಾರ್ಟ್‌ಮೆಂಟ್‌ವೊಂದಕ್ಕೆ ಸಹಚರರ ಜೊತೆ ಬುಧವಾರ ಬಂದಿದ್ದ. ಇದೇ ಸಂದರ್ಭದಲ್ಲಿ ದುಷ್ಕರ್ಮಿಗಳ ತಂಡ, ದಾಳಿ ಮಾಡಿ ಕೊಂದಿದೆ’ ಎಂದು ಪೊಲೀಸರು ಹೇಳಿದರು.

‘ತೀವ್ರ ಗಾಯಗೊಂಡಿದ್ದ ದಿನೇಶ್, ಸರ್ವೀಸ್ ಅಪಾರ್ಟ್‌ಮೆಂಟ್‌ನಲ್ಲಿಯೇ ಮೃತಪಟ್ಟಿದ್ದಾನೆ. ಸೋಫಾ ಮೇಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ಕೊಠಡಿ ಕೇಳಿ ಬಂದಿದ್ದರು: ‘ದಿನೇಶ್ ಹಾಗೂ ಸಹಚರರು, ಒಂದು ದಿನದ ಬಾಡಿಗೆಗೆಂದು ಕೊಠಡಿ ಕೇಳಿಕೊಂಡು ಸರ್ವೀಸ್ ಅಪಾರ್ಟ್‌ಮೆಂಟ್‌ಗೆ ಬಂದಿದ್ದರು. ಸೋಫಾ ಮೇಲೆ ದಿನೇಶ್ ಕುಳಿತಿದ್ದರು. ಇಬ್ಬರು, ಹಣ ಪಾವತಿಸಲು ಕೌಂಟರ್ ಬಳಿ ಹೋಗಿದ್ದರು’ ಎಂದು ಪೊಲೀಸರು ಹೇಳಿದರು.

‘ಸಹಚರರ ಬಳಿ ನಗದು ಇರಲಿಲ್ಲ. ಗೂಗಲ್‌ ಪೇ ಮಾಡುವುದಾಗಿ ಹೇಳಿದ್ದರು. ಆದರೆ, ನಗದು ಮಾತ್ರ ಸ್ವೀಕರಿಸುವುದಾಗಿ ಸಿಬ್ಬಂದಿ ತಿಳಿಸಿದ್ದರು. ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಸಹಚರರು, ಎಟಿಎಂ ಘಟಕಕ್ಕೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಸರ್ವೀಸ್ ಅಪಾರ್ಟ್‌ಮೆಂಟ್‌ಗೆ ನುಗ್ಗಿದ್ದ ಆರೋಪಿಗಳು, ದಿನೇಶ್‌ನನ್ನು ಕೊಂದು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.