ಬೆಂಗಳೂರು: ತನ್ನನ್ನು ಬಂಧಿಸಲು ಬಂದಿದ್ದ ಸಬ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆಗೆ ಮುಂದಾಗಿದ್ದ ರೌಡಿ ಸ್ಯಾಮುಯೆಲ್ (24) ಮೇಲೆ ಅಮೃತಹಳ್ಳಿ ಠಾಣೆ ಇನ್ಸ್ಪೆಕ್ಟರ್ ಗುರುಪ್ರಸಾದ್ ಮಂಗಳವಾರ ಸಂಜೆ ಗುಂಡಿನ ದಾಳಿ ನಡೆಸಿದ್ದಾರೆ.
‘ಸಂಪಿಗೆಹಳ್ಳಿಯ ಕಲ್ಲಿಪಾಳ್ಯದ ಕ್ವಾರಿಯೊಂದರ ಬಳಿ ಸ್ಯಾಮುಯೆಲ್ ಅಡಗಿ ಕುಳಿತಿದ್ದ. ಈ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದರಿಂದ ಸ್ಥಳಕ್ಕೆ ತೆರಳಿದ್ದೆವು. ಈ ವೇಳೆ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ಅವರು ಆರೋಪಿಯನ್ನು ಬಂಧಿಸಲು ಮುಂದಾಗಿದ್ದರು. ಆಗ ಆರೋಪಿ ಡ್ರ್ಯಾಗರ್ನಿಂದ ಪ್ರಕಾಶ್ ಮೇಲೆ ಹಲ್ಲೆಗೆ ಯತ್ನಿಸಿದ್ದ. ಇದರಿಂದ ಅವರ ಕೈಗೆ ಗಾಯವಾಗಿತ್ತು. ಇನ್ಸ್ಪೆಕ್ಟರ್ ಗುರುಪ್ರಸಾದ್ ಅವರು ಶರಣಾಗುವಂತೆ ಸ್ಯಾಮುಯೆಲ್ಗೆ ಸೂಚಿಸಿದ್ದರು. ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಆತ ಪ್ರಯತ್ನಿಸಿದ. ಆತ್ಮರಕ್ಷಣೆಯ ದೃಷ್ಟಿಯಿಂದ ಆತನ ಮೇಲೆ ಒಂದು ಸುತ್ತಿನ ಗುಂಡಿನ ದಾಳಿ ನಡೆಸಲಾಯಿತು’ ಎಂದು ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹೇಳಿದರು.
‘ಸ್ಯಾಮುಯೆಲ್ ಮೇಲೆ ಕೊಲೆ ಯತ್ನ, ದರೋಡೆ, ಡಕಾಯಿತಿ ಸೇರಿದಂತೆ ಒಟ್ಟು 8 ಗಂಭೀರ ಪ್ರಕರಣಗಳಿದ್ದವು. ಆತ ಎಂಟು ತಿಂಗಳಿಂದ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸಿ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಪ್ರಕಾಶ್ ಅವರಿಗೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.