ADVERTISEMENT

ಆರ್‌.ಆರ್‌. ನಗರ ಉಪ ಚುನಾವಣೆ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 14:07 IST
Last Updated 9 ಅಕ್ಟೋಬರ್ 2020, 14:07 IST
   

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕ್ಷೇತ್ರ ವ್ಯಾಪ್ತಿಯಲ್ಲಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

‘ಚುನಾವಣಾ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಅಕ್ಟೋಬರ್ 9ರ ಬೆಳಿಗ್ಗೆ 10 ಗಂಟೆಯಿಂದ ಅ. 16ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಆಯಾ ಅಭ್ಯರ್ಥಿಗಳ ಬೆಂಬಲಿಗರು ಕೋವಿಡ್ ನಿಯಮ ಪಾಲಿಸಬೇಕು. ನಿಯಮ ಉಲ್ಲಂಘಿಸಿ ಕಚೇರಿ ಬಳಿ ಗುಂಪು ಸೇರುವುದು, ರಸ್ತೆ ತಡೆ, ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಾಮಪತ್ರ ಸಲ್ಲಿಸುವ ಕಚೇರಿ ಸುತ್ತಮುತ್ತಲ 100 ಮೀಟರ್ ವ್ಯಾಪ್ತಿಯಲ್ಲಿ ಅನಗತ್ಯ ಓಡಾಟ ನಿರ್ಬಂಧಿಸಲಾಗಿದೆ.’

ADVERTISEMENT

‘5 ಅಥವಾ ಅದಕ್ಕಿಂತ ಹೆಚ್ವು ಜನ ಗುಂಪು ಸೇರುವುದು, ದೊಣ್ಣೆ, ಕತ್ತಿ, ಕಲ್ಲು, ಇಟ್ಟಿಗೆ ಸೇರಿದಂತೆ ಮಾರಕಾಸ್ತ್ರ ಹಿಡಿದು ಓಡಾಡುವುದು, ಪ್ರತಿಕೃತಿ ದಹನ ಸೇರಿದಂತೆ ಯಾವುದೇ ಕಾನೂನುಬಾಹಿರ ಚಟುವಟಿಕೆ ಮಾಡಬಾರದು. ಮಾಡಿದರೆ, ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.