ಯಲಹಂಕ: ಮುಖ್ಯಮಂತ್ರಿಗಳ ನಗರೋತ್ಥಾನ ಮತ್ತು ವಿಶೇಷ ಅನುದಾನದಡಿಯಲ್ಲಿ ₹14 ಕೋಟಿ ವೆಚ್ಚದಲ್ಲಿ ಯಲಹಂಕ ಹಾಗೂ ಉಪನಗರ ವ್ಯಾಪ್ತಿಯ ಬಡಾವಣೆಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಜಿಕೆವಿಕೆ ಬಡಾವಣೆಯಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿ, ‘ಭಾರಿ ಮಳೆ ಸುರಿದ ಕಾರಣ ಕಳೆದ 4 ತಿಂಗಳಿಂದ ಕೆಲವು ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಧ್ಯಾನಮಂದಿರ, ಸರ್ಕಾರಿ ಶಾಲಾ ಕಟ್ಟಡಗಳು, ಪಾದಚಾರಿ ಮಾರ್ಗ, ರಸ್ತೆ, ಚರಂಡಿ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಎಲ್ಲ ರಸ್ತೆಗಳ ಡಾಂಬರೀಕರಣ, ಚರಂಡಿ, ಉದ್ಯಾನ ನಿರ್ವಹಣೆ, ಕೆರೆಗಳ ಅಭಿವೃದ್ಧಿ, ವಿದ್ಯುತ್ ದೀಪ ಸೇರಿದಂತೆ ಬಿಬಿಎಂಪಿಯ ಬಹುತೇಕ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ‘ ಎಂದರು.
ಪಾಲಿಕೆ ಮಾಜಿ ಸದಸ್ಯರಾದ ಎಂ.ಸತೀಶ್, ಎಂ.ಮುನಿರಾಜು, ಬಿಜೆಪಿ ಮುಖಂಡರಾದ ಎಚ್.ಬಿ.ಹನುಮಯ್ಯ, ಮಧುಸೂದನ್, ವೈ.ಜಿ.ವಸಂತ್, ಸೋಮಶೇಖರ್, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಸುಧಾಕರ್ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಚಿನ್ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.