ADVERTISEMENT

ಆರ್‌ಟಿಇ ಕಾಯ್ದೆ ತಿದ್ದುಪಡಿಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 19:32 IST
Last Updated 7 ಡಿಸೆಂಬರ್ 2018, 19:32 IST

ಬೆಂಗಳೂರು: ಸಮೀಪದಲ್ಲಿ ಸರ್ಕಾರಿ ಶಾಲೆ ಇದ್ದರೆ ಕಡ್ಡಾಯ ಶಿಕ್ಷಣ ಹಕ್ಕು(ಆರ್‌ಟಿಇ) ಕಾಯ್ದೆಯಡಿ ಖಾಸಗಿ ಶಾಲೆಗಳಿಗೆ ದಾಖಲಾಗುವ ವಿದ್ಯಾರ್ಥಿಗಳ ಶುಲ್ಕ ಭರಿಸದೇ ಇರಲು ಸರ್ಕಾರ ಕೈಗೊಂಡಿರುವ ತೀರ್ಮಾನಕ್ಕೆ ಪೋಷಕರು ಮತ್ತು ಶಿಕ್ಷಣ ತಜ್ಞರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ಕಾರದ ನಿಲುವಿಗೆ ಪೋಷಕರ ಸಮೂಹ ಅಸಮಾಧಾನ ವ್ಯಕ್ತಪಡಿಸುತ್ತಿದೆ.

‘ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಪೋಷಕರ ಮಕ್ಕಳು ಸಹ ಉತ್ತಮ ಶಾಲೆಗಳಲ್ಲಿ ಕಲಿಯುವ ಅವಕಾಶ ಆರ್‌ಟಿಇನಿಂದಾಗಿ ಸಿಕ್ಕಿತ್ತು. ಕಾಯ್ದೆಯ ತಿದ್ದುಪಡಿಯಿಂದ ಕೆಳಸಮುದಾಯದ ಮಕ್ಕಳು ಇಂಗ್ಲಿಷ್‌ ಮಾಧ್ಯಮದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಇದೊಂದು ರೀತಿಯ ಸಾಮಾಜಿಕ ಅನ್ಯಾಯ’ ಎಂದು ಹೆಸರು ಹೇಳಲಿಚ್ಛಿಸದ ಪೋಷಕರೊಬ್ಬರು ಅತೃಪ್ತಿ ಹೊರಹಾಕಿದರು.

ADVERTISEMENT

‘ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳಿಲ್ಲ. ಹಾಗಾಗಿ ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ಮುಂದಾಗುತ್ತಿದ್ದಾರೆ. ಮೊದಲು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಿ ಇಂತಹ ನಿಯಮಗಳನ್ನು ರೂಪಿಸಬೇಕು’ ಎಂದು ಆರ್‌ಟಿಇ ಕಾರ್ಯಪಡೆ ಸಂಚಾಲಕಜಿ.ನಾಗಸಿಂಹ ರಾವ್‌ ಅಭಿಪ್ರಾಯಪಟ್ಟರು.

‘ಸರ್ಕಾರದ ನಿರ್ಧಾರವನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ. ಆರ್‌ಟಿಐ ಕಾಯ್ದೆಯಡಿ ಸದ್ಯ ದಾಖಲಾಗಿರುವ ಮಕ್ಕಳು ಪ್ರಾಥಮಿಕ ಶಿಕ್ಷಣ ಮುಗಿಸುವವರೆಗೂ ಸರ್ಕಾರವೇ ಶುಲ್ಕವನ್ನು ಸಕಾಲಕ್ಕೆ ಪಾವತಿಸಬೇಕು’ ಎಂಬುದು ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಒತ್ತಾಯ.

‘ನೆರೆಹೊರೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಾಖಲಾತಿಯಲ್ಲಿ ಆದ್ಯತೆ ನೀಡಬೇಕು ಎಂಬ ಅಂಶಆರ್‌ಟಿಇ ಕಾಯ್ದೆಯ 8 ಮತ್ತು 9ನೇ ಸೆಕ್ಷನ್‌ಗಳಲ್ಲಿ ಮೊದಲಿನಿಂದಲೂ ಇದೆ. ಅದನ್ನು ಸರ್ಕಾರ ಈಗ ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಜಾರಿ ಮಾಡುತ್ತಿರುವುದು ಸಂತಸದ ವಿಚಾರ’ ಎಂದುಶಿಕ್ಷಣ ತಜ್ಞವಿ.ಪಿ.ನಿರಂಜನಾರಾಧ್ಯ ತಿಳಿಸಿದರು.

* ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ತಳೆದಿದೆ. ಈ ಹಿಂದಿನ ಆರ್‌ಟಿಇ ವ್ಯವಸ್ಥೆಯನ್ನೇ ಮುಂದುವರಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತೇವೆ
-ಬಿ.ಎನ್‌.ಯೋಗಾನಂದ, ಪ್ರಧಾನ ಕಾರ್ಯದರ್ಶಿ, ಆರ್‌ಟಿಇ ಮಕ್ಕಳು ಮತ್ತು ಪೋಷಕರ ಒಕ್ಕೂಟ

* ಸರ್ಕಾರಿ ಶಾಲೆಗಳು ಇಲ್ಲದ ಪ್ರದೇಶಗಳಲ್ಲಿ ಬಡ ಮಕ್ಕಳನ್ನು ನಮ್ಮ ಶಾಲೆಗಳಲ್ಲಿ ಆರ್‌ಟಿಇ ಕಾಯ್ದೆಯಡಿ ದಾಖಲು ಮಾಡಿಕೊಂಡು ಗುಣಮಟ್ಟದ ಶಿಕ್ಷಣ ನೀಡುತ್ತೇವೆ
-ಡಿ.ಶಶಿಕುಮಾರ್‌, ಪ್ರಧಾನ ಕಾರ್ಯದರ್ಶಿ,ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.