ಬೆಂಗಳೂರು: ‘ಸಾರಿಗೆ ಇಲಾಖೆ ಅಧಿಕಾರಿಗಳು, ಹಣ ನಿಗದಿ ಮಾಡಿ ಆರ್ಟಿಒ ಕಚೇರಿಗಳಲ್ಲಿ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಕರ್ನಾಟಕ ರಾಷ್ಟ್ರ ಸಮಿತಿ ದೂರು ಸಲ್ಲಿಸಿದೆ.
ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್ ಎಂಬುವರು ಈ ದೂರು ಸಲ್ಲಿಸಿದ್ದಾರೆ.
‘ಗುಮಾಸ್ತರಿಗೆ ₹1.50 ಲಕ್ಷ, ಸಹಾಯಕರಿಗೆ ₹ 5 ಲಕ್ಷ, ಹೀಗೆ.. ನಾನಾ ಹುದ್ದೆಗಳಿಗೆ ಹಣ ನಿಗದಿ ಮಾಡಿ ವರ್ಗಾವಣೆ ಮಾಡಲಾಗುತ್ತಿದೆ. ಇಲಾಖೆ ಕೆಲ ಅಧಿಕಾರಿಗಳು, ಆರ್ಟಿಒ ಕಚೇರಿ ನೌಕರರಿಗೆ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಹಣ ನೀಡದಿದ್ದರೆ ದೂರದ ಊರುಗಳಿಗೆ ವರ್ಗಾವಣೆ ಮಾಡುವುದಾಗಿ ಬೆದರಿಸುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
‘ಭ್ರಷ್ಟಾಚಾರದಿಂದ ಜನರು ರೋಸಿ ಹೋಗಿದ್ದಾರೆ. ಇದೀಗ, ವರ್ಗಾವಣೆ ದಂಧೆಯೂ ನಡೆಯುತ್ತಿದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳ ಬೇಕು’ ಎಂದೂ ಒತ್ತಾಯಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.