ಬೆಂಗಳೂರು: ನಗರದ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಸಂಸ್ಥಾಪಕ ಟ್ರಸ್ಟಿಯೂ ಆಗಿರುವ ವೈದ್ಯ ಡಾ. ಎಲ್. ಶಿವಲಿಂಗಯ್ಯ ಅವರ ಕೊಲೆಗೆ ಯತ್ನ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಶಿವಲಿಂಗಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ 2 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕೊಲೆಗೆ ಯತ್ನ ನಡೆದಿರುವ ಬಗ್ಗೆ ಮಗ ಡಾ. ರವಿ ಪ್ರಕಾಶ್ ಇತ್ತೀಚೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
‘ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿದ್ದರಿಂದ ಶಿವಲಿಂಗಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ವೈದ್ಯಕೀಯ ಪರೀಕ್ಷೆ ನಡೆಸಿದಾಗ, ದೇಹದಲ್ಲಿ ಅಲ್ಪಪ್ರಮಾಣದಲ್ಲಿ ವಿಷದ ಅಂಶವಿರುವುದು ಪತ್ತೆಯಾಗಿದೆ. ಅದೇ ಅನುಮಾನದಲ್ಲಿ ಪುತ್ರ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಆಸ್ತಿ ವಿಚಾರವಾಗಿ ಕುಟುಂಬದವರ ನಡುವೆ ವ್ಯಾಜ್ಯವಿದೆ. ಆಸ್ತಿ ಕಬಳಿಸುವ ಉದ್ದೇಶದಿಂದ ವಿಷ ಹಾಕಿರುವ ಆರೋಪವೂ ಕೇಳಿಬರುತ್ತಿದೆ. ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.