ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ‘ಸೀಮಾತೀತ ಸಾಹಿತ್ಯ ಪರ್ಬ’ ರಾಷ್ಟ್ರ ಮಟ್ಟದ ಸಾಹಿತ್ಯ ಸಮಾವೇಶ ಆಗಸ್ಟ್ 1ರಿಂದ 3ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಅಕಾಡೆಮಿಯ ಅಧ್ಯಕ್ಷ ಅರವಿಂದ ಮಾಲಗತ್ತಿ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ ಸಮಾವೇಶದಲ್ಲಿ 170ಕ್ಕೂ ಹೆಚ್ಚಿನ ಸಾಹಿತಿಗಳು ಭಾಗವಹಿಸಲಿದ್ದಾರೆ. ಸಾಮಾನ್ಯವಾಗಿ ಎಲ್ಲ ಕಾರ್ಯಕ್ರಮಗಳಲ್ಲಿ ವಿದ್ವಾಂಸರು ಹಾಗೂ ಸಾಹಿತ್ಯ ದಿಗ್ಗಜರು ವೇದಿಕೆಯಲ್ಲಿ ಇರುತ್ತಾರೆ. ಆದರೆ, ಈ ಕಾರ್ಯಕ್ರಮದಲ್ಲಿ ಸಾಹಿತಿಗಳು ಎಲ್ಲರೊಡನೆ ಬೆರೆತು ಮುಕ್ತ ಚರ್ಚೆ ನಡೆಸಲಿದ್ದಾರೆ’ ಎಂದರು.
‘ಮೂರು ದಿನಗಳಲ್ಲಿ ಪ್ರಧಾನ ಸಂವಾದ ಗೋಷ್ಠಿಗಳು ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಪರ್ಯಾಯ ಗೋಷ್ಠಿಗಳು ಸಂಜೆ 4ರಿಂದ ರಾತ್ರಿ 8 ಗಂಟೆಯವರೆಗೆ ನಡೆಯಲಿವೆ. ಪ್ರತಿ ಗೋಷ್ಠಿಯಲ್ಲೂ ಮೂವರು ವಿಷಯ ತಜ್ಞರು ಹಾಗೂ ಒಬ್ಬರು ಸಂವಾದಕರು ಇರಲಿದ್ದಾರೆ’.
‘ಮೊದಲದಿನದಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಂದ 40 ಪುಸ್ತಕಗಳು ಬಿಡುಗಡೆಯಾಗಲಿವೆ. ಕಾರ್ಯಕ್ರಮವನ್ನು ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಬಿ.ಎ.ವಿವೇಕ ರೈ ಉದ್ಘಾಟಿಸಲಿದ್ದಾರೆ’ ಎಂದರು.
‘ಸಮಾವೇಶದಲ್ಲಿ ಪ್ರಬಂಧ ಮಂಡಿಸಲು ಸಂಶೋಧನಾ ವಿದ್ಯಾರ್ಥಿಗಳಿಂದ ಆರು ತಿಂಗಳ ಹಿಂದೆ ಅರ್ಜಿ ಆಹ್ವಾನಿಸಲಾಗಿತ್ತು. ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 270 ಮಂದಿಗೆ ವಿಚಾರ ಮಂಡನೆಗೆ ಅವಕಾಶ ನೀಡಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.