ಬೆಂಗಳೂರು: ‘ರಾಜ್ಯ ಸರ್ಕಾರ ಹಮ್ಮಿಕೊಳ್ಳುವ ಉತ್ಸವ ಹಾಗೂ ಪ್ರಮುಖ ಕಾರ್ಯಕ್ರಮಗಳಿಗೆ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣ ನೀಡುವ ಸಂಪ್ರದಾಯ ಈ ಹಿಂದೆ ಇತ್ತು. ಅದನ್ನು ಇತ್ತೀಚಿನ ದಿನಗಳಲ್ಲಿ ಕೈಬಿಟ್ಟಿರುವುದು ಸರಿಯಲ್ಲ’ ಎಂದು ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ‘ಗಣ್ಯರಿಗೆ ಆಮಂತ್ರಣ ನೀಡುವ ಪರಿಪಾಠ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆಮಂತ್ರಣ ನೀಡುವುದು ಸರ್ಕಾರದ ವಿವೇಚನೆಯಾದರೂ, ಸತ್ಸಂಪ್ರದಾಯ ಕೈಬಿಡಬಾರದು. ತಮ್ಮ ಅನನ್ಯ ಸಾಧನೆಗಳ ಮೂಲಕ ನಾಡಿನ ಕೀರ್ತಿಯನ್ನು ಹೆಚ್ಚಿಸಿರುವ ಸಾಧಕರನ್ನು ಉಪೇಕ್ಷಿಸುವುದು ಸೂಕ್ತವಲ್ಲ. ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಲೋಕದ ವಿವಿಧ ಪ್ರಕಾರಗಳಲ್ಲಿ ಸೇವೆ ಸಲ್ಲಿಸಿ, ಸಾಧನೆಗೈದ ಅನೇಕ ಗಣ್ಯರು ರಾಜಧಾನಿ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಅಂತಹ ಗಣ್ಯರನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಕು’ ಎಂದು ಮನವಿ ಮಾಡಿದ್ದಾರೆ.
‘ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಿದಲ್ಲಿ ಕಾರ್ಯಕ್ರಮದ ಘನತೆಯೂ ಹೆಚ್ಚುತ್ತದೆ. ಈ ಬಗ್ಗೆ ಹಿಂದೆಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಸೇರಿ ವಿವಿಧ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಸೂಕ್ತ ಸ್ಪಂದನ ದೊರೆತಿರಲಿಲ್ಲ. ಈಗಲಾದರೂ ಈ ಬಗ್ಗೆ ಕ್ರಮವಹಿಸಿ’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.