ಬೆಂಗಳೂರು: ‘ಕೋವಿಡ್ ನಿಯಂತ್ರಿಸಲು ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ 9 ವಾರ್ಡ್ಗಳ ಪಾಲಿಕೆ ಸದಸ್ಯರನ್ನು ವೈಯಕ್ತಿಕವಾಗಿ ಕರೆದು ಸಭೆ ನಡೆಸುತ್ತೇನೆ. ಸೋಮವಾರವೇ ಸಭೆ ನಡೆಸಲು ವ್ಯವಸ್ಥೆ ಮಾಡಿ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜರಾಜೇಶ್ವರಿ ನಗರ ವಲಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
‘ರಾಜರಾಜೇಶ್ವರಿ ನಗರ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಬೀದಿಗಳು ಹಾಗೂ ಸೋಂಕಿತರ ಮನೆಗಳಲ್ಲಿ ಸಮರ್ಪಕವಾಗಿ ಸ್ಯಾನಿಟೈಸ್ ಮಾಡಬೇಕು’ ಎಂದು ಸೂಚಿಸಿದರು.
‘ವಾರ್ಡ್ ಮಟ್ಟದಲ್ಲಿ ಪತ್ತೆಯಾಗುತ್ತಿರುವ ಸೋಂಕು ಪ್ರಕರಣಗಳ ಕುರಿತು ದೂರು ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಎಲ್ಲೇ ಸಮಸ್ಯೆ ಕಂಡು ಬಂದರೂ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು’ ಎಂದು ಸೂಚಿಸಿದರು.
ಡಿಸಿಪಿ ರಮೇಶ್ ಕುಮಾರ್, ‘ಕೋವಿಡ್ ಪರೀಕ್ಷಾ ವರದಿ ಬರುವುದು ವಿಳಂಬವಾಗುತ್ತಿದೆ. ಪಾಸಿಟಿವ್ ಪತ್ತೆಯಾದ ಬಳಿಕ ಪಾಲಿಕೆಯವರು ಮರುದಿನ ಸೋಂಕಿತರ ಮನೆಗೆ ಬರುತ್ತಾರೆ. ಇದರ ನಡುವೆ ಸೋಂಕಿತರು ಹಾಗೂ ಅವರ ಮನೆಯವರಿಂದ ದೂರಿನ ಕರೆಗಳು ಹೆಚ್ಚಾಗಿ ಬರುತ್ತಿವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.