ಕೆ.ಆರ್.ಪುರ: ಶಿಕ್ಷಕರು ಕನ್ನಡ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಹೇಳಿದರು.
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಭಾಷಾ ಶಿಕ್ಷಕರಿಗೆ ಹಾಗೂ ಕನ್ನಡದಲ್ಲಿ ನೂರಕ್ಕೆ ನೂರರಷ್ಟು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡದ ಸಾಂಸ್ಕೃತಿಕ ಹಿನ್ನೆಲೆ, ಭೌಗೋಳಿಕ ಚಾರಿತ್ರಿಕ ಮಹತ್ವ, ದಾರ್ಶನಿಕರ ಇತಿಹಾಸ ಮುಂತಾದ ಅನೇಕ ಅಂಶಗಳನ್ನು ಶಾಲಾ ಮಕ್ಕಳಿಗೆ ಬೋಧನೆಯ ಸಮಯದಲ್ಲಿ ಹೇಳಿ ಕನ್ನಡ ಉಳಿಸುವ ಕಾರ್ಯಕ್ಕೆ ಮುಂದಾಗಿರುವುದರಿಂದ ಅವರಿಗೆ ನಿಜವಾಗಿ ಅಭಿನಂದನೆ ಸಲ್ಲಬೇಕಿದೆ ಎಂದರು.
ಕಸಾಪ ಅಧ್ಯಕ್ಷ ಯೋಗ ವರ್ಧಮಾನ ಕಳಸೂರು ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ವಿಜ್ಞಾನ, ವೈದ್ಯಕೀಯ, ಎಂಜಿನಿಯರಿಂಗ್ ಪದವಿಗಳಲ್ಲೂ ಕನ್ನಡ ಐಚ್ಛಿಕ ಭಾಷೆಯಾಗಿ ತೆಗೆದುಕೊಳ್ಳಲು ಅವಕಾಶವಿದೆ ಎಂದರು.
ಕನ್ನಡದಲ್ಲಿ ಹೆಚ್ಚು ಅಂಕ ಪಡೆದ 288 ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ 48 ಶಾಲೆಯ ಕನ್ನಡ ಭಾಷಾ ಶಿಕ್ಷಕರು ಮತ್ತು 13 ಸ್ಕೌಟ್ ಅಂಡ್ ಗೈಡ್ಸ್ ಶಿಕ್ಷಕರನ್ನು ಅಭಿನಂದಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.